ಕುಶಾಲನಗರ, ಆ. 22: ಕೊಡಗಿನ ಪತ್ರಿಕಾ ಕ್ಷೇತ್ರದ ಭೀಷ್ಮ ಎಂದೇ ಖ್ಯಾತಿ ಗಳಿಸಿರುವ ಶಕ್ತಿ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್.ಗೋಪಾಲಕೃಷ್ಣ ಅವರ 86ನೇ ಹುಟ್ಟುಹಬ್ಬ ಕಾರ್ಯಕ್ರಮ ತಾ.24 ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ಸುದ್ದಿ ಸೆಂಟರ್‍ನ ಸಂಚಾಲಕ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲೆಯಲ್ಲಿ 6 ದಶಕಗಳ ಹಿಂದೆ ಪತ್ರಿಕೆಯನ್ನು ಹುಟ್ಟುಹಾಕಿ ಇದೀಗ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಯ ಓದುಗರ ಮುಖವಾಣಿಯಾಗಿರುವ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್.ಗೋಪಾಲಕೃಷ್ಣ ಅವರ ಜನ್ಮದಿನಾಚರಣೆ ಮೂಲಕ ಹಿರಿಯ ಪತ್ರಿಕೋದ್ಯಮಿಗಳ ಸ್ಮರಣೆ ಹಾಗೂ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮದೊಂದಿಗೆ ಪತ್ರಿಕೆಗಳ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ಅವಲೋಕನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕುಶಾಲನಗರದ ಕಾವೇರಿ ಸುದ್ದಿಸೆಂಟರ್ ಮತ್ತು ‘ಶಕ್ತಿ’ ಬಳಗದ ಆಶ್ರಯದಲ್ಲಿ ಸ್ಥಳೀಯ ಮಹಾಲಕ್ಷ್ಮಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮ ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ವಹಿಸÀಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎ.ಹಸನಬ್ಬ ಕಾರ್ಯಕ್ರಮ ಉದ್ಘಾಟಿಸುವರು. ಶಕ್ತಿ ದಿನಪತ್ರಿಕೆ ಸಂಪಾದಕ ಬಿ.ಜಿ.ಅನಂತಶಯನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಾಚರಣಿಯಂಡ ಪಿ.ಅಪ್ಪಣ್ಣ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನ್, ಶಕ್ತಿ ದಿನಪತ್ರಿಕೆ ಪ್ರಧಾನ ವ್ಯವಸ್ಥಾಪಕ ಜಿ.ಚಿದ್ವಿಲಾಸ್ ಮತ್ತು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹೊಸ ಪ್ರತಿಭೆ ಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶಕ್ತಿ ದಿನಪತ್ರಿಕೆಯ ಆಡಳಿತ ವ್ಯವಸ್ಥಾಪಕಿ ಪ್ರಜ್ಞಾ ರಾಜೇಂದ್ರ, ದಂತವೈದ್ಯೆ ಡಾ.ಅನುಶ್ರೀ ಅನಂತಶಯನ, ಕಸ್ತೂರಿ ವಾಹಿನಿಯ ಸುದ್ದಿ ನಿರೂಪಕಿ ಸಿಂಚನಾ ಚಂದ್ರಮೋಹನ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಗುವದು ಎಂದು ತಿಳಿಸಿದರು. ಅಂದು ಬೆಳಿಗ್ಗೆ ಬಿ.ಎಸ್.ಗೋಪಾಲಕೃಷ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಕುಶಾಲನಗರ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗುವದು ಎಂದು ‘ಶಕ್ತಿ’ ಬಳಗದ ಕೆ.ಕೆ.ನಾಗರಾಜಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ‘ಶಕ್ತಿ’ ಬಳಗದ ಪ್ರಮುಖ ಡಿ.ಆರ್.ಸೋಮಶೇಖರ್, ಕುಡೆಕಲ್ ಗಣೇಶ್, ವಿ.ಪಿ.ಸುಖೇಶ್, ಚಂದ್ರಯ್ಯ ಇದ್ದರು.