ಮಡಿಕೇರಿ, ಜೂ. 15: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸಾಧಾರಣ ಮಳೆಯಾಗುತ್ತಿರು ವದರಿಂದ ರೈತರ ಮೊಗದಲ್ಲಿ ಹರ್ಷ ತಂದಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಮುಸುಕಿನ ಜೋಳದ ಬೆಳೆಗಳು ಪ್ರಮುಖವಾಗಿದ್ದು, ಸದ್ಯದಲ್ಲಿಯೇ ಭತ್ತ ಒಟ್ಟಲು ಪಾತಿ (ಸಸಿ ಮಡಿ) ಮಾಡುವ ಕಾರ್ಯಕ್ಕೆ ಕೃಷಿಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ 31 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಕೃಷಿ ಮಾಡುವ ಗುರಿ ಇದ್ದು, ಇದೇ ರೀತಿ ಮಳೆ ಮುಂದುವರಿದಲ್ಲಿ ಶೀಘ್ರ ಭತ್ತ ಸಸಿಮಡಿ ಕಾರ್ಯ ಪ್ರಾರಂಭವಾಗಲಿದೆ. ಭತ್ತದ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು 1 ಕೆ.ಜಿ.ಗೆ 8 ರೂ.ಗಳ ಸಹಾಯ ಧನದಡಿ ಪಡೆಯ ಬಹುದಾಗಿದೆ.

ರೈತರು ಸಸಿ ಮಡಿ ಮಾಡುವ ಸಂದರ್ಭದಲ್ಲಿ ಬಿತ್ತನೆಗೆ ಮೊದಲು ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ಉಪಯೋಗಿಸುವದು ಸೂಕ್ತವಾಗಿದೆ. ಪ್ರತಿ ಕೆ.ಜಿ.ಭತ್ತ ಬಿತ್ತನೆ ಬೀಜಕ್ಕೆ 2 ಗ್ರಾಂ. ಬೇವಿಸ್ಟಿನ್ (ಕಾರ್ಬನ್‍ಡೈಜಿಂ) ಶಿಲೀಂದ್ರ ನಾಶಕ ಪುಡಿಯನ್ನು ಬೆರೆಸಿ ಬೀಜೋಪಚಾರ ಮಾಡುವದು ಸೂಕ್ತವಾಗಿದೆ. ರೈತರು ಬಿತ್ತನೆ ಬೀಜವನ್ನು ನೀರಿನಲ್ಲಿ ನೆನೆಸಿ ತೆಗೆದ ನಂತರ ಮೊಳಕೆಗೆ ಇಡುವ ಮೊದಲು ಬೀಜೋಪಚಾರ ಮಾಡುವದು ಒಳಿತಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗದ ಬಾಧೆ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇರುವದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಬಿತ್ತನೆಗೆ ಮೊದಲು ಕಾರ್ಬನ್‍ಡೈಜಿಂ ಶಿಲೀಂಧ್ರ ನಾಶಕದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವದು ಸೂಕ್ತವಾಗಿದೆ.

ರೈತರು ಬಿತ್ತನೆ ಬೀಜವನ್ನು 24 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ ಹೊರ ತೆಗೆದ ನಂತರ ನೀರನ್ನು ಬಸಿದು ಪ್ರತೀ ಒಂದು ಕೆ.ಜಿ.ಬಿತ್ತನೆ ಬೀಜಕ್ಕೆ 4 ಗ್ರಾಂ.ನಂತೆ ಕಾರ್ಬನ್‍ಡೈಜಿಂ ಶಿಲೀಂಧ್ರ ನಾಶಕವನ್ನು ಚೆನ್ನಾಗಿ ಮಿಶ್ರಮಾಡಿ ನೆರಳಿನಲ್ಲಿ ಒಣಗಿಸಿ ನಂತರ ಮೊಳಕೆಗೆ ಇಟ್ಟು ಮೊಳಕೆ ಬಂದ ನಂತರ ಸಸಿ ಮಡಿಯಲ್ಲಿ ಬಿತ್ತನೆ ಮಾಡುವದು. ಹೀಗೆ ಮಾಡುವದರಿಂದ ಬೀಜದಿಂದ ಬರುವ ಬೆಂಕಿ ರೋಗವನ್ನು ತಡೆಗಟ್ಟಬಹುದಾಗಿದೆ.

ದೀರ್ಘಾವಧಿ ತಳಿಗಳಾದ ಇಂಟಾನ್, ತುಂಗಾ, ಅತಿರ, ಬಿ.ಆರ್.2655, ತನು ತಳಿ ಭತ್ತಗಳನ್ನು ಜೂನ್ 10 ರಿಂದ 25ರ ಒಳಗೆ ಬಿತ್ತನೆ ಮಾಡುವದು.

ಮಧ್ಯಮಾವಧಿ ತಳಿಗಳಾದ ಐ.ಇ.ಟಿ.7191, ಜಯ, ಎಂ.ಟಿ.ಯು 1001 ತಳಿಗಳನ್ನು ಜೂನ್ 4ನೇ ವಾರದಲ್ಲಿ ಬಿತ್ತನೆ ಮಾಡುವದು. ಅಲ್ಪಾವಧಿ ತಳಿಗಳಾದ ಐ.ಆರ್.64, ಹೈಬ್ರೀಡ್ ಭತ್ತಗಳನ್ನು ಜುಲೈ ಮೊದಲನೇ ವಾರದಲ್ಲಿ ಬಿತ್ತನೆಗೆ ಬಳಸುವದು ಸೂಕ್ತವಾಗಿದೆ.

ಜಿಲ್ಲೆಯ ಎರಡನೇ ಪ್ರಮುಖ ಬೆಳೆಯಾದ ಮುಸುಕಿನ ಜೋಳದ 4 ಸಾವಿರ ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 800 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಉಳಿದಂತೆ ಬಿತ್ತನೆ ಕಾರ್ಯ ಮುಂದುವರೆದಿದೆ. ಮುಸುಕಿನ ಜೋಳದ ಬಿತ್ತನೆ ಬೀಜವನ್ನು ಪ್ರತಿ ಕೆ.ಜಿ.ಗೆ 20 ರೂ.ಗಳ ಸಹಾಯಧನದಡಿ ವಿತರಣೆ ಮಾಡಲಾಗುತ್ತಿದೆ.

ಕಳೆದ ಬಾರಿ 30,500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಗುರಿ ಹೊಂದಲಾಗಿತ್ತು. ಈ ಬಾರಿ 31 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಗುರಿ ಹೊಂದಲಾಗಿದೆ.

ಹಾಗೆಯೇ ಮುಸುಕಿನ ಜೋಳ ಬಿತ್ತನೆ ಪ್ರದೇಶದ ವಿಸ್ತೀರ್ಣ ಸುಮಾರು ಕಳೆದ ಬಾರಿ 3500 ಹೆಕ್ಟೇರ್ ಪ್ರದೇಶ ಗುರಿ ಇತ್ತು. ಈ ಬಾರಿ 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮಾಡುವ ಗುರಿ ಹೊಂದಲಾಗಿದೆ.