ವೀರಾಜಪೇಟೆ, ನ. 28: ನೋಟು ನಿಷೇಧದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರೆ, ಬಿಜೆಪಿ ವತಿಯಿಂದ ಇಲ್ಲಿನ ಬ್ಯಾಂಕ್‍ಗಳಿಗೆ ತೆರಳಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಕೆ. ಮನುಮುತ್ತಪ್ಪ ನೇತೃತ್ವದಲ್ಲಿ ಇಲ್ಲಿನ ಗಡಿಯಾರ ಕಂಬ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೈಕಾರ ಘೋಷಣೆ ಕೂಗಿ ಸಂಭ್ರಮಿಸಿದರು.ಬಳಿಕ ಕಾರ್ಯಕರ್ತರು ಪಟ್ಟಣದ ವಿವಿಧ ಬ್ಯಾಂಕ್‍ಗಳಿಗೆ ತೆರಳಿ ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದಂದಿನಿಂದಲೇ ಒತ್ತಡದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿ ಅವರಿಗೆ ಸಿಹಿ ಹಂಚಿದರು.

ಈ ಸಂದರ್ಭ ಮನುಮುತ್ತಪ್ಪ ಮಾತನಾಡಿ ನೋಟು ನಿಷೇಧದಿಂದ ಕಪ್ಪು ಹಣ ನಿಯಂತ್ರಣಕ್ಕೆ ಬರಲಿದೆ. ಬ್ಯಾಂಕ್

(ಮೊದಲ ಪುಟದಿಂದ) ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒತ್ತಡದ ಮಧ್ಯೆಯೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪಟ್ಟಣ ಗ್ರಾಮೀಣ ಪ್ರದೇಶಗಳಲ್ಲಿರುವ ಬ್ಯಾಂಕ್‍ಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿ ಸಿಹಿ ಹಂಚಲಾಗಿದೆ ಎಂದರು. ಸಂಭ್ರಮಾಚರಣೆಯಲ್ಲಿ ವೀರಾಜಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ, ಜಿಲ್ಲಾ ಕಚೇರಿ ಕಾರ್ಯದರ್ಶಿ ಮಧುದೇವಯ್ಯ, ರಾಜ್ಯ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಜೋಕಿಂ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಚಿನ್ ಕುಟ್ಟಯ್ಯ, ಉಪಾಧ್ಯಕ್ಷೆ ತಸ್ನೀಂ ಅಕ್ತರ್ ಹಾಗೂ ಪಟ್ಟಣ ಪಂಚಾಯಿತಿ ಇತರ ಸದಸ್ಯರು ಮತ್ತು ಇನ್ನಿತರ ಕಾರ್ಯಕರ್ತರು ಇದ್ದರು.