ಸೋಮವಾರಪೇಟೆ, ಜೂ. 19: ತಾಲೂಕಿನ ಪ್ರವಾಸಿ ತಾಣವಾದ ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶದ ಮಲ್ಲಳ್ಳಿ ಜಲಪಾತಕ್ಕೆ ತೆರಳಲು ಸರ್ಕಾರದಿಂದ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಪರಿಶೀಲಿಸಿದರು.

ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಮಾಹಿತಿ, ಪ್ರಸ್ತುತ ಕೈಗೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿವರ ಪಡೆದ ಜಿಲ್ಲಾಧಿಕಾರಿಗಳು, ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸೂಚಿಸಿದರು.

ಕೆಲವು ಕಡೆಗಳಲ್ಲಿ ಲೋಕೋಪಯೋಗಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಉದ್ದೇಶಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಹೆಚ್ಚುವರಿ ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದರೆ ಇಲಾಖೆಯಿಂದ ವರದಿ ತಯಾರಿಸುವಂತೆ ಸೂಚಿಸಿದರು. ಈ ಸಂದರ್ಭ ತಹಶೀಲ್ದಾರ್ ಶಿವಪ್ಪ, ಜಿ.ಪಂ. ಅಭಿಯಂತರ ಮಹೇಂದ್ರಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಗ್ರಾ.ಪಂ. ಮಾಜಿ ಸದಸ್ಯ ಕುಮಾರಳ್ಳಿ ಪ್ರದೀಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.