ಮಡಿಕೇರಿ, ಅ.27 : ಶಿಕ್ಷಕರು ಮಕ್ಕಳಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ ಬೆಳೆಸುವದರೊಂದಿಗೆ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಬೇಕು ಎಂದು ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮೇಗೌಡ ಹೇಳಿದರು.ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ ಹಾಗೂ ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ಸಂಯುಕ್ತಾಶ್ರಯದಲ್ಲಿ “ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವೇಷಣೆಗಳ ಬಳಕೆ” ಎಂಬ ಕೇಂದ್ರ ವಿಷಯದಡಿ 24 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಪೂರ್ವಭಾವಿಯಾಗಿ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಮಾರ್ಗದರ್ಶಿ ಶಿಕ್ಷಕರಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷಕರು ಮಕ್ಕಳಿಂದ ಪ್ರಾಯೋಗಿಕ ಚಟುವಟಿಕೆ ಮತ್ತು ಅಧ್ಯಯನ ಕೈಗೊಳ್ಳುವ ಮೂಲಕ ಅವರಲ್ಲಿ ಪರಿಸರ ಕಾಳಜಿ ಬೆಳೆಸಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಂಟಿ ಕಾರ್ಯದರ್ಶಿ ಟಿ.ಜಿ. ಪ್ರೇಮಕುಮಾರ್, ಮಕ್ಕಳ ವಿಜ್ಞಾನ ಸಮಾವೇಶದ ಮೂಲಕ ಮಕ್ಕಳು ತಮ್ಮ ಸುತ್ತಲಿನ ಪರಿಸರದ ಸಮಸ್ಯೆಗಳನ್ನು ಗುರುತಿಸಿ ಸಮೀಕ್ಷೆ ನಡೆಸುವ ಅವುಗಳಿಗೆ ಸೂಕ್ತ ಕಾರಣಗಳನ್ನು ಕಂಡುಕೊಂಡು ಮಾಹಿತಿ ಕಲೆಹಾಕಿ ವಿಶ್ಲೇಷಣೆ

(ಮೊದಲ ಪುಟದಿಂದ) ಮೂಲಕ ಸೂಕ್ತ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಲು ನೆರವಾಗುತ್ತದೆ. ಈ ಸಮಾವೇಶವು ಮಕ್ಕಳನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸುತ್ತದೆ ಎಂದರು.

ಸಮಾವೇಶದಲ್ಲಿ ಜಿಲ್ಲಾಮಟ್ಟ ದಿಂದ ಆಯ್ಕೆಗೊಳ್ಳುವ ಮೊದಲ 10 ತಂಡಗಳು ಡಿ.3 ರಿಂದ 5ರ ತನಕ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಲಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಡಿ. 27-31 ರ ತನಕ 5 ದಿನಗಳ ಕಾಲ ಮಹಾರಾಷ್ಟ್ರದ ಬಾರಾಮತಿ ನಗರದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್, ಶಿಕ್ಷಕರು ಮಕ್ಕಳಲ್ಲಿ ಪರಿಸರ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಯೋಜನೆಗಳನ್ನು ರೂಪಿಸಬೇಕು ಎಂದರು.

ಸಮಾವೇಶದ ಮಾರ್ಗದರ್ಶಿ ಕೈಪಿಡಿ ಬಿಡುಗಡೆ ಮಾತನಾಡಿದ ರೋಟರಿ ಮಿಸ್ಟಿಹಿಲ್ಸ್ ಕಾರ್ಯದರ್ಶಿ ಡಾ|| ಎನ್.ಎಸ್. ನವೀನ್, ವಿಜ್ಞಾನ ಸಮಾವೇಶವು ಮಕ್ಕಳು ತಮ್ಮನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಎಸ್. ಶ್ರೀನಾಥ್, ಸಮಾವೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಷಯದಡಿ ಮಕ್ಕಳಿಂದ ಅಭ್ಯಾಸ ಚಟುವಟಿಕೆ ಮತ್ತು ಸಮೀಕ್ಷೆ ನಡೆಸುವ ಮೂಲಕ ಮಾಹಿತಿ ಸಂಗ್ರಹಿಸಿ ಹೇಗೆ ವೈಜ್ಞಾನಿಕ ಯೋಜನಾ ಪ್ರಬಂಧವನ್ನು ಮಂಡಿಸಬೇಕು ಎಂಬ ವಿಚಾರದ ಬಗ್ಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ರೋಟರಿ ಮಿಸ್ಟಿ ಹಿಲ್ಸ್‍ನ ಉಪಾಧ್ಯಕ್ಷ ರಾಮಚಂದ್ರ ಮೂಗೂರು, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಜಿ. ಕುಮಾರ್,ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಡಿ.ಎಂ.ರೇವತಿ, ಸಹ ಕಾರ್ಯದರ್ಶಿ ಎಸ್.ನಾಗರಾಜ್, ಸದಸ್ಯ ಪಿ.ಆರ್.ಅಯ್ಯಪ್ಪ, ಸಮಾವೇಶದ ಜಿಲ್ಲಾ ಸಂಯೋಜಕ ಸಿ.ಎಸ್. ಸುರೇಶ್. ಶೈಕ್ಷಣಿಕ ಸಂಯೋಜಕ ಜಿ.ಶ್ರೀಹರ್ಷ,ಶಿಕ್ಷಣ ಸಂಯೋಜಕ ಚಂದ್ರಹಾಸ್ ಇದ್ದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.