ಸೋಮವಾರಪೇಟೆ, ಮೇ 26: ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಪಂಚಾಯಿತಿ ಸದಸ್ಯ ಆದಂ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಮಹಿಳಾ ಘಟಕ ಆಗ್ರಹಿಸಿದೆ.

ಪಂಚಾಯಿತಿಯ ಮಹಿಳಾ ಅಧ್ಯಕ್ಷೆಯ ಮೇಲೆ ಹಲ್ಲೆ ನಡೆಸಿರುವ ಕ್ರಮ ಖಂಡನೀಯ. ಈ ಹಿಂದೆಯೂ ದಲಿತ ಮಹಿಳೆಯ ಅಂಗಡಿಯನ್ನು ಸ್ಥಳಾಂತರಿಸಿ ಅವರ ಕುಟುಂಬವನ್ನು ಬೀದಿಗೆ ತಳ್ಳಿದ ಆದಂ ಅವರು ಮತ್ತೊಮ್ಮೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಇದುವರೆಗೂ ಆರೋಪಿಯನ್ನು ಬಂಧಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ತಲೆಮರೆಸಿಕೊಂಡಿರುವ ಆದಂ ಅವರನ್ನು ತಕ್ಷಣ ಬಂಧಿಸಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು. ತಪ್ಪಿದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ವತಿಯಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೂಪಾ ಸುರೇಶ್ ಎಚ್ಚರಿಸಿದ್ದಾರೆ.