ಕುಶಾಲನಗರ, ಆ. 16: ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಸಂಜೆ ಚಾಕು ಇರಿತಕ್ಕೆ ಒಳಗಾದ ಉತ್ತರಪ್ರದೇಶ ಮೂಲದ ನಿವಾಸಿ ಅಬ್ದುಲ್ ಕದ್ದೂಸ್ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಕುವಿನಿಂದ ಇರಿದ ಆರೋಪ ಹಿನ್ನೆಲೆಯಲ್ಲಿ ಕುಶಾಲನಗರದ ಮನು ಎಂಬ ಆಟೋ ಚಾಲಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಗುಡ್ಡೆಹೊಸೂರಿನಲ್ಲಿ ಆಟೋ ಚಾಲಕ ಪ್ರವೀಣ್ ಪೂಜಾರಿ ಹತ್ಯೆ ಬೆನ್ನಲ್ಲೇ ಈ ಘಟನೆ ಸಂಭವಿಸಿದ್ದು, ಕುಶಾಲನಗರ ಪಟ್ಟಣ ಸೇರಿದಂತೆ ಗುಡ್ಡೆಹೊಸೂರು ಮುಂತಾದ ಆಯಕಟ್ಟಿನ ಪ್ರದೇಶಗಳಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪಟ್ಟಣದಲ್ಲಿ 144 ಸೆಕ್ಷನ್ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ನಡೆದ ಪ್ರಕರಣಗಳ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪೊಲೀಸ್ ವಾಹನಗಳ ಓಡಾಟ ಅಧಿಕಗೊಂಡಿದ್ದು, ಸಾಮಾನ್ಯ ಜನತೆ ಆತಂಕದ ನಡುವೆ ಮಂಗಳವಾರದ ಸಂತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ದೃಶ್ಯ ಕಂಡುಬಂತು.