ಮಡಿಕೇರಿ, ಅ. 21: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳ್ಳಭಟ್ಟಿ ತಯಾರಿಸುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಕಳ್ಳಭಟ್ಟಿ ದಂಧೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಪಡೆದು ಅವರು ಮಾತನಾಡಿದರು. ಕಳ್ಳಭಟ್ಟಿ ದಂಧೆ ನಿಯಂತ್ರಣ ಮಾಡುವಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಕಳ್ಳಭಟ್ಟಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಳ್ಳಭಟ್ಟಿ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವದರ ಜೊತೆಗೆ ಅಲ್ಲಲ್ಲಿ ಕಾರ್ಯಾ ಗಾರವನ್ನು ಏರ್ಪಡಿಸುವಂತೆ ಅಬಕಾರಿ ಇಲಾಖೆ ಉಪ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಭಟ್ಟಿ ದಂಧೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಿಡೀರ್ ಧಾಳಿ ಮಾಡಬೇಕು.

ರಾತ್ರಿ ಪಾಳಿಯಲ್ಲಿ ಗಸ್ತು ತಿರುಗುವಂತಾಗಬೇಕು. ಅಗತ್ಯ ಸ್ಕ್ವಾಡ್‍ಗಳನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸಲಹೆ ಮಾಡಿದರು. ಕಳ್ಳಭಟ್ಟಿ ಸೇರಿದಂತೆ ಯಾವದೇ ರೀತಿಯ ಅಕ್ರಮ ಮದ್ಯ ಮಾರಾಟ ಚಟುವಟಿಕೆಗಳ ನಿಯಂತ್ರಣ ಬಗ್ಗೆ ತೀವ್ರ ನಿಗಾವಹಿಸಬೇಕು. ಆ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಅಬಕಾರಿ ಇಲಾಖೆಯ ಉಪ ಆಯುಕ್ತ ಶಿವಣ್ಣ ಮಾತನಾಡಿ, ಕಳ್ಳಭಟ್ಟಿ ದಂಧೆ ನಿಯಂತ್ರಣ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಲ್ಲಿ 221 ಧಾಳಿ ಮಾಡಿ, 16 ಘೋರ ಪ್ರಕರಣಗಳನ್ನು ದಾಖಲಿಸಲಾಗಿದ್ದು, 5 ಆರೋಪಿ ಗಳನ್ನು ದಸ್ತಗಿರಿ ಮಾಡಲಾಗಿದೆ. ಒಟ್ಟು 29 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಳ್ಳಲಾಗಿದ್ದು, 235 ಲೀಟರ್ ಬೆಲ್ಲದಕೊಳೆ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕಳ್ಳಭಟ್ಟಿಯೇತರ (ಅಕ್ರಮ ಮದ್ಯ ಮಾರಾಟ) ಮಾಡುವ ಕಡೆಗಳಲ್ಲಿ 764 ಧಾಳಿಗಳನ್ನು ಮಾಡಿ, 12 ಘೋರ ಪ್ರಕರಣಗಳನ್ನು ದಾಖಲಿಸಲಾಗಿದೆ. 29 ಸಾಮಾನ್ಯ ಪ್ರಕರಣಗಳು ಹಾಗೂ 123 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಶಿವಣ್ಣ ಮಾಹಿತಿ ನೀಡಿದರು.

ಅಬಕಾರಿ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಅಡ್ಡೆಗಳ ಮೇಲೆ ಧಾಳಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮತ್ತಿತರ ಕುರಿತು ಹಲವು ಮಾಹಿತಿ ನೀಡಿದರು.