ಕುಶಾಲನಗರ, ಜು. 8: ಡಿವೈಎಸ್ಪಿ ಎಂ.ಕೆ.ಗಣಪತಿ ಸಾವಿಗೆ ಮುನ್ನ ನೀಡಿದ ಹೇಳಿಕೆಯನ್ನಾಧರಿಸಿ ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಸಚಿವರೊಬ್ಬರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳುವಂತೆ ರಾಜ್ಯ ಬಿಜೆಪಿ ವಕ್ತಾರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೊ.ಮಧುಸೂದನ್ ಒತ್ತಾಯಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಅಂತಿಮ ನಮನ ಸಲ್ಲಿಸಿದ ನಂತರ ರಂಗಸಮುದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿ ತಪಿತಸ್ಥರ ಮೇಲೆ ಕ್ರಮಕೈಗೊಳ್ಳಬೇಕಾಗಿದೆ ಎಂದರು. ಪೊಲೀಸ್ ಅಧಿಕಾರಿಗಳು ಯಾವದೇ ಸಂದರ್ಭ ಧೃತಿಗೆಡದೆ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ ಎಂದ ಮಧುಸೂದನ್, ರಾಜ್ಯದ ಜನತೆ ತಮ್ಮ ಬೆಂಬಲಕ್ಕಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ಅಧಿಕಾರಿಗಳು ಭಯಮಿಶ್ರಿತವಾಗಿ ಕೆಲಸ ನಿರ್ವಹಿಸುವ ಸ್ಥಿತಿ ಸೃಷ್ಟಿಯಾಗಿದೆ. ಕಳೆದ ವರ್ಷಗಳಲ್ಲಿ ಹಲವು ಅಧಿಕಾರಿಗಳು ಸರಕಾರದ ಬೇಜವಾಬ್ದಾರಿಯಿಂದ ಜೀವ ತೆರುವ ಪರಿಸ್ಥಿತಿಗೆ ಒಳಗಾಗುತ್ತಿದ್ದಾರೆ. ಹಲವೆಡೆ ಅಧಿಕಾರಿಗಳಿಗೆ ಭಯೋತ್ಪಾದನೆ ಮಾಡುವ ಪ್ರಕರಣಗಳು ಕಂಡು ಬರುತ್ತಿದ್ದು ಸರಕಾರ ಈ ನಿಟ್ಟಿನಲ್ಲಿ ಎಚ್ಚರಗೊಳ್ಳಬೇಕಾಗಿದೆ. ಇಲ್ಲದಿದ್ದಲ್ಲಿ ಜನರೇ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.