ಮಡಿಕೇರಿ, ಜು. 23: ಜಿಲ್ಲಾ ನೀರಾವರಿ ಯೋಜನೆ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ಧತಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಆದ್ದರಿಂದ ಮಳೆಗಾಲದ ಅವಧಿಯಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ನೀರಾವರಿ ಯೋಜನೆ ತಯಾರಿ ಅತ್ಯಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆ ಸಂಬಂಧ ಕೂಡಲೇ ವರದಿ ನೀಡುವಂತೆ ನಿರ್ದೇಶನ ನೀಡಿದರು. ಗಣಿ ಮತ್ತು ಭೂ ವಿಜ್ಞಾನ, ಜಿ.ಪಂ. ಇಂಜಿನಿಯರ್ ವಿಭಾಗ, ಬೃಹತ್ ನೀರಾವರಿ, ಸಣ್ಣ ನೀರಾವರಿ, ತೋಟಗಾರಿಕೆ, ಪಶುಪಾಲನೆ, ಕಾಫಿ ಮಂಡಳಿ ಹೀಗೆ ವಿವಿಧ ಇಲಾಖೆಗಳು ತಮ್ಮ ಇಲಾಖಾ ವ್ಯಾಪ್ತಿಯ ಮಾಹಿತಿಯನ್ನು ಕೃಷಿ ಇಲಾಖೆಗೆ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಮಳೆಗಾಲದ ಅವಧಿಯಲ್ಲಿ ಮಳೆ ನೀರನ್ನು ತಡೆಗಟ್ಟಿ ಅಂತರ್ಜಲ ಮಟ್ಟ ಹೆಚ್ಚಿಸಲು ಕಾರ್ಯಕ್ರಮ ರೂಪಿಸುವದು, ಚೆಕ್ ಡ್ಯಾಂಗಳ ನಿರ್ಮಾಣ, ಹೀಗೆ ವಿವಿಧ ರೀತಿಯ ಯೋಜನೆಗಳ ಉದ್ದೇಶವನ್ನು ಜಿಲ್ಲಾ ನೀರಾವರಿ ಯೋಜನೆ ಒಳಗೊಂಡಿದ್ದು, ಇದೊಂದು ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ರಾಮಪ್ಪ ಮಾತನಾಡಿ, ಮಳೆ ನೀರನ್ನು ಸಂಗ್ರಹಿಸಿ ಬಳಸುವದು, ಬದುಗಳ ನಿರ್ಮಾಣ, ಮಣ್ಣಿನ ಸವಕಳಿ ತಡೆಗಟ್ಟುವದು ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಈ ಸಂಬಂಧ ಭವಿಷ್ಯದ ಹಿತದೃಷ್ಟಿಯಿಂದ ನೀರಿನ ಮಹತ್ವವನ್ನು ಅರಿಯುವ ನಿಟ್ಟಿನಲ್ಲಿ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ವರದಿ ನೀಡುವಂತೆ ಅವರು ಕೋರಿದರು.

ನಬಾರ್ಡ್ ಸಹಾಯಕ ಮಹಾ ಪ್ರಬಂಧಕ ಮುಂಡಂಡ ಸಿ. ನಾಣಯ್ಯ ಅವರು ಮಾತನಾಡಿ, ನಬಾರ್ಡ್‍ನ ಕನ್ಸಟೆಂನ್‍ನ ಎನ್.ಎ.ಬಿ.ಸಿ. ಒ.ಎನ್.ಎಸ್. ಸಂಸ್ಥೆಯು ರಾಷ್ಟ್ರದಲ್ಲಿ ಮಾತ್ರವಲ್ಲ, ವಿದೇಶಿದಲ್ಲಿಯೂ ಸಹ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ, ಮಾರ್ಗದರ್ಶನ ನೀಡುತ್ತಿದೆ. ದೇಶದ ಗುಜರಾತ್, ಹಿಮಾಚಲ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಜಿಲ್ಲಾ ನೀರಾವರಿ ಯೋಜನೆಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಅದೇ ರೀತಿ ಕೊಡಗಿನಲ್ಲಿಯೂ ಸಹ ಜಿಲ್ಲಾ ನೀರಾವರಿ ಯೋಜನೆ ತಯಾರಿಗೆ ಸಂಸ್ಥೆ ಸಿದ್ಧವಿದೆ ಎಂದು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು. ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಆರ್. ಗಿರೀಶ್, ಜಿ.ಪಂ. ಇಂಜಿನಿ ಯರ್‍ಗಳಾದ ರಾಜ್‍ಕುಮಾರ್ ರೆಡ್ಡಿ, ಶಶಿಧರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಎಸ್. ಸುಮಿತ್ರ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಬೃಹತ್ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಧರ್ಮರಾಜು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಸುರೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್, ತಾಂತ್ರಿಕ ಅಧಿಕಾರಿ ರಮೇಶ್, ಕಾಫಿ ಮಂಡಳಿ ಉಪ ನಿರ್ದೇಶಕರು, ಜಿಲ್ಲಾ ನೀರಾವರಿ ಯೋಜನೆಯ ಸಮಿತಿ ಸದಸ್ಯರು ಮತ್ತಿತರರು ಹಲವು ಮಾಹಿತಿ ನೀಡಿದರು.