ಮಡಿಕೇರಿ, ಅ.31: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು.

ರಾಷ್ಟ್ರೀಯ ಸಂಕಲ್ಪ ದಿನದ ಮಹತ್ವದ ಬಗ್ಗೆ ಮಾತನಾಡಿದ ವಕೀಲ ಎಂ.ಎ. ನಿರಂಜನ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ಹಲವು ಆದರ್ಶ, ಮಾದರಿ ಆಡಳಿತ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು. ಬ್ಯಾಂಕುಗಳ ರಾಷ್ಟ್ರೀಕರಣ ಸೇರಿದಂತೆ 18 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶದಲ್ಲಿ ಶ್ರೀಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡಿದರು. ಇದರಿಂದ ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದರು ಎಂದು ಅವರು ಸ್ಮರಿಸಿದರು.

ದೇಶದ ಉಕ್ಕಿನ ಮಹಿಳೆ, ಜಗತ್ತಿನ ಪ್ರಮುಖ ನಾಯಕಿ, ಭಾರತಕ್ಕೆ ಅಂತರಾಷ್ಟ್ರೀಯ ಸಮುದಾಯದಲ್ಲಿ ಗೌರವ ಸ್ಥಾನ ತಂದುಕೊಟ್ಟವರು, ದೇಶದ ಭವ್ಯ ಭವಿಷ್ಯಕ್ಕಾಗಿ ಇಂದಿರಾ ಗಾಂಧಿ ಅವರು ತಮ್ಮ ಬದುಕನ್ನೆ ಸಮರ್ಪಿಸಿದರು. ಇಡೀ ದೇಶವೇ ಹೆಮ್ಮೆ ಪಡುವಂತಹ ಜಾತ್ಯಾತೀತ ನಾಯಕಿಯಾಗಿದ್ದ ಅವರ ವ್ಯಕ್ತಿತ್ವ ವಿಶಿಷ್ಟವಾಗಿತ್ತು ಎಂದು ಸ್ಮರಿಸಿದರು.

ದೇಶದ ಪ್ರಥಮ ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ರಾಷ್ಟ್ರೀಯ ಏಕೀಕರಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು. ರಾಷ್ಟ್ರದ ಆಂತರಿಕ ಭದ್ರತೆಗೆ ಶ್ರಮಿಸಿದರು ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ ರಾಷ್ಟ್ರ ನಾಯಕರಾದ ಇಂದಿರಾ ಗಾಂಧಿ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಅವರು ಜಾರಿಗೊಳಿಸಿದ ಕಾರ್ಯಕ್ರಮಗಳ ಬಗ್ಗೆ ಮನನ ಮಾಡಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಏರ್ಪಡಿಸ ಲಾಗಿದ್ದ ರಾಷ್ಟ್ರೀಯ ಐಕ್ಯತಾ ಗೀತೆ ಗಳನ್ನು ರವಿ ಭೂತನಕಾಡು ಹಾಡಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ಜಿ.ಪಂ. ಯೋಜನಾ ನಿರ್ದೇಶಕರಾದ ಸಿದ್ಧಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ತಹಶೀಲ್ದಾರ್ ಕುಸುಮ, ತಾ.ಪಂ.ಇಒ ಜೀವನ್ ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರ್ ಪ್ರಕಾಶ, ಶ್ರೀಷ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.