ಸೋಮವಾರಪೇಟೆ, ಡಿ. 25: ಬಸವಣ್ಣನವರ ತತ್ವ ಮತ್ತು ಆದರ್ಶಗಳು ಸಾರ್ವಕಾಲಿಕ ಶ್ರೇಷ್ಠವಾದುದು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ವಿರಕ್ತ ಮಠದ ಆವರಣದಲ್ಲಿ ನಡೆದ ಸದಸ್ಯತ್ವ ಅಭಿಯಾನ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ ಜಾತಿ, ಮತ, ಭೇದ ತೊರೆದು, ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿ ಸಮಾನತೆಯನ್ನು ಸಾರಿದ ಬಸವಣ್ಣನವರ ಹೆಸರಿನಲ್ಲಿ ಶರಣ ಸಾಹಿತ್ಯ ಪರಿಷತ್ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ನಡೆಸಲು ಮುಂದಾಗಿರುವದು ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ಎಸ್. ಮಹೇಶ್ ವಹಿಸಿದ್ದರು. ವೇದಿಕೆಯಲ್ಲಿ ವಿರಕ್ತ ಮಠಾಧೀಶರಾದ ವಿಶ್ವೇಶ್ವರ ಸ್ವಾಮೀಜಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪರಾಜೇಶ್, ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಇದ್ದರು.