ಮಡಿಕೇರಿ, ಜೂ. 18: ಮುಂಗಾರು ಮಳೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮುಂಗಾರು ಹಂಗಾಮಿಗೆ ಬೇಕಿರುವ ಭತ್ತ ಹಾಗೂ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಮಪ್ಪ ಮಾತನಾಡಿ, ಜಿಲ್ಲೆಯಲ್ಲಿ 31 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಹಾಗೂ 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡುವ ಗುರಿ ಹೊಂದಲಾಗಿದ್ದು, ಅಗತ್ಯ ಬಿತ್ತನೆ ಬೀಜ ದಾಸ್ತಾನು ಮಾಡಿ ವಿತರಣೆಗೆ ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ಬೇಡಿಕೆಯಷ್ಟು ರಸಗೊಬ್ಬರವನ್ನು ದಾಸ್ತಾನು ಮಾಡಲಾಗಿದ್ದು, ಸಹಕಾರ ಸಂಘಗಳು ಹಾಗೂ ಖಾಸಗಿಯಾಗಿ ರಸಗೊಬ್ಬರ ಪಡೆಯಬಹುದಾಗಿದೆ. ಡಿಎಪಿ, ಎಂ.ಒ.ಪಿ., ಯೂರಿಯಾ, ಎನ್.ಪಿ.ಕೆ, ಎಸ್.ಎಸ್.ಪಿ ಒಟ್ಟು 28,930 ಟನ್ನಷ್ಟು ದಾಸ್ತಾನು ಮಾಡಿ ಸರಬರಾಜು ಆಗಿದೆ ಎಂದು ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆಯ ಅಧಿಕಾರಿ ಜಿಲ್ಲೆಯಲ್ಲಿ 539 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಬೆಳೆಯಲಾಗುತ್ತದೆ. ಇದರಲ್ಲಿ ಮಾವು, ಸಪೋಟ, ತೆಂಗು, ಕಾಳುಮೆಣಸು ಬೆಳಯಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 1.86 ಲಕ್ಷ ಜಾನುವಾರುಗಳಿದ್ದು, ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿರುವದರಿಂದ ಜಾನುವಾರುಗಳಿಗೆ ಮೇವು ತೊಂದರೆಯಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ನಾಗರಾಜು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ಸಾಧಾರಣವಾಗಿ ಮಳೆಯಾಗುತ್ತಿದೆ. ಆದರೂ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಸಮಸ್ಯೆಗಳಿದ್ದಲ್ಲಿ ಪರಿಹರಿಸುವಂತೆ ಸಂಬಂಧಪಟ್ಟ ಇಂಜಿನಿಯರ್ಗಳಿಗೆ ಸೂಚನೆ ನೀಡಿದರು.
ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆರ್.ಟಿ.ಸಿ. ಆಗದಿರುವ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಪ್ರಥಮ ಆದ್ಯತೆಯಲ್ಲಿ ಆರ್.ಟಿ.ಸಿ. ನೀಡುವಂತೆ ಎಡಿಸಿ ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ಮಳೆಯಾಗದೆ ಕಾಫಿ ಬೆಳೆ ನಷ್ಟ ಉಂಟಾಗಿದ್ದಲ್ಲಿ ನಿಖರ ಮಾಹಿತಿ ಸಂಗ್ರಹಿಸುವಂತೆ ಕಾಫಿ ಮಂಡಳಿ ಉಪ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಸಲಹೆ ಮಾಡಿದರು.
ಬೆಳೆ ಹಾನಿ, ಕುಡಿಯುವ ನೀರು ಮತ್ತಿತರ ಸಂಬಂಧ ಆದ್ಯತೆ ಮೇಲೆ ಕಾರ್ಯನಿರ್ವಹಿಸಬೇಕಿದೆ. ಬೆಳೆ ಹಾನಿಗೆ ಪರಿಹಾರ ವಿತರಿಸುವದು, ಕುಡಿಯುವ ನೀರು ಸಮಸ್ಯೆ ಇದ್ದಲ್ಲಿ ಬಗೆ ಹರಿಸುವದು ಮತ್ತಿತರ ಸಂಬಂಧ ಆದ್ಯತೆ ಮೇಲೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲೆಯ ಹಲವು ಶಾಲೆಗಳಲ್ಲಿ ಶೌಚಾಲಯವಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಕಟ್ಟಡ ನಿರ್ಮಿಸುವಾಗ ಶೌಚಾಲಯ ನಿರ್ಮಿಸದಿದ್ದಲ್ಲಿ ಹೇಗೆ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಜೂನ್ 10 ರಿಂದ ಮರಳು ಸಾಗಾಣಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ವರದಿಗಳು ಬರುತ್ತವೆ. ಈ ಸಂಬಂಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು. ಇದುವರೆಗೆ ಅಕ್ರಮ ಮರಳು ಸಾಗಾಣಿಕೆ ಸಂಬಂಧಿಸಿದಂತೆ ಎಷ್ಟು ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ಒದಗಿಸುವಂತೆ ತಿಳಿಸಿದರು. ಈ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಮಹೇಶ್ ಬಾಳೆಲೆ ಮತ್ತು ಶನಿವಾರಸಂತೆ ವ್ಯಾಪ್ತಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಕಾಫಿ ಮಂಡಳಿಯ ಉಪ ನಿರ್ದೇಶಕ ರಾಮಗೌಂಡರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು, ಜಿ.ಪಂ. ಇಂಜಿನಿಯರ್ಗಳಾದ ಶಶಿಧರ, ರೆಡ್ಡಿ ಮತ್ತಿತರರು ಹಲವು ಮಾಹಿತಿ ನೀಡಿದರು. ತಹಶೀಲ್ದಾರರಾದ ಶಿವಪ್ಪ, ಕುಂಜಮ್ಮ, ಮಹದೇವಸ್ವಾಮಿ, ಜಿಲ್ಲಾಧಿಕಾರಿ ಕಚೇರಿಯ ಪ್ರವೀಣ್ ಕುಮಾರ್, ಪ್ರಕಾಶ್, ಭಾಗ್ಯಲಕ್ಷ್ಮಿ, ಕೃಷ್ಣಮೂರ್ತಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರು ಇದ್ದರು.