ಸಿದ್ದಾಪುರ, ಜೂ. 18: ಸಮೀಪದ ಮಾಲ್ದಾರೆ ಸರಕಾರಿ ಆಸ್ಪತ್ರೆಯಲ್ಲಿ ಕೂಡಲೇ ವೈದ್ಯರನ್ನು ನೇಮಿಸಬೇಕೆಂದು ಚೆನ್ನಯ್ಯನಕೋಟೆ ಕ್ಷೇತ್ರದ ಜಿ.ಪಂ. ಸದಸ್ಯೆ ಹೆಚ್.ಎಸ್. ಲೀಲಾವತಿ ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಮಾಲ್ದಾರೆ ಗಿರಿಜನ ಹಾಡಿಗಳಿಗೆ ಹಾಗೂ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದಿರುವದರ ಬಗ್ಗೆ ಗ್ರಾಮಸ್ಥರು ಜಿ.ಪಂ. ಸದಸ್ಯರ ಗಮನಕ್ಕೆ ತಂದರು. ನಂತರ ಮಾತನಾಡಿದ ಅವರು, ಮಾಲ್ದಾರೆ ಹಾಗೂ ಕಳ್ಳಲ ಭಾಗದಲ್ಲಿ ಬಹುತೇಕ ಬಡ ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದು, ಜನರ ಹಿತದೃಷ್ಠಿಯಿಂದ ಸರಕಾರ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಿದೆ. ಆದರೆ, ಇದೀಗ ವೈದ್ಯರ ಕೊರತೆಯಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಹಾಡಿಯ ಗಿರಿಜನರು ದೂರದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕಾಗಿದ್ದು, ಕಾಡಾನೆ ಹಾವಳಿ ಹೆಚ್ಚಾಗಿರುವದರಿಂದ ದೂರದ ಊರುಗಳಿಗೆ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರಲಾಗುವದು ಮಾತ್ರವಲ್ಲದೆ ಜಿ.ಪಂ. ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವದು ಎಂದು ತಿಳಿಸಿದ್ದಾರೆ.