ಮಡಿಕೇರಿ, ಆ. 16: ಕುಶಾಲನಗರದ ಗುಡ್ಡೆಹೊಸೂರು ಬಳಿ ಅಖಂಡ ಭಾರತ ಸಂಕಲ್ಪ ದಿನದ ಕಾರ್ಯಕ್ರಮ ಮುಗಿಸಿ ಹಿಂದಿರುಗಿದ ಬಳಿಕ ಆಟೋ ಚಾಲಕ ಪ್ರವೀಣ್ ಪೂಜಾರಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘದ ಆಟೋ ಘಟಕ ಹಾಗೂ ಕೊಡಗು ಜಿಲ್ಲಾ ಆಟೋ ಚಾಲಕರು ಮತ್ತು ಮಾಲೀಕರ ಸಂಘವ ವತಿಯಿಂದ ಜಿಲ್ಲಾಡಳಿತಕ್ಕೆ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಯಿತು.

ಆಟೋ ಚಾಲಕರು ಬಾಡಿಗೆಯ ಉದ್ದೇಶದೊಂದಿಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೂ ಸಂಚರಿಸಬೇಕಿದೆ. ಚಾಲಕರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಪ್ರವೀಣ್ ಪೂಜಾರಿಯ ಹತ್ಯೆ ಆರೋಪಿಗಳನ್ನು ತಕ್ಷಣ ಬಂಧಿಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ ಪ್ರತಿಭಟನಕಾರರು ತಪ್ಪಿದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಭಾರತೀಯ ಮಜ್ದೂರ್ ಸಂಘದ ಆಟೋ ಘಟಕದ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇಂತಹ ಘಟನೆ ಮತ್ತೆ ಜಿಲ್ಲೆಯಲ್ಲಿ ಮರುಕಳಿಸದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಆಟೋ ಚಾಲಕರಿಗೆ ಸೂಕ್ತ ಭದ್ರತೆಯನ್ನು ಜಿಲ್ಲಾಡಳಿತ ಒದಗಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಆಟೋ ಚಾಲಕರು - ಮಾಲೀಕರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತ್ಯೇಕವಾಗಿ ಮನವಿ ಸಲ್ಲಿಸಿದ ಸಂದರ್ಭ ಭಾರತೀಯ ಮಜ್ದೂರ್ ಸಂಘದ ಆಟೋ ಘಟಕದ ಅಧ್ಯಕ್ಷ ಎ.ಎಂ. ಡಾಲೇಶ್, ಉಪಾಧ್ಯಕ್ಷ ಧರ್ಮೆಂದ್ರ, ಕಾರ್ಯದರ್ಶಿ ಗಣೇಶ್, ಪದಾಧಿಕಾರಿಗಳಾದ ಸುಧೀಂದ್ರ ಹಾಗೂ ಇನ್ನಿತರರು ಇದ್ದರು.