ಕುಶಾಲನಗರ, ಮಾ. 5: ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಾಲೇಜಿನ ಅಂತಿಮ ಸಿವಿಲ್ ವಿಭಾಗದ ವಿದ್ಯಾರ್ಥಿ ಕೀರ್ತಿ (20) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಕುಶಾಲನಗರ ಗಂದದಕೋಟೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನದಲ್ಲಿ ಈ ಪ್ರಕರಣ ನಡೆದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ವಿದ್ಯಾರ್ಥಿ ಮೂಲತಹ ಕೆ.ಆರ್.ನಗರ ನಿವಾಸಿಯಾಗಿದ್ದು ಮೃತನ ಪೋಷಕರು ಆತ್ಮಹತ್ಯೆಯ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೊಲೆ ಶಂಕೆಯೊಂದಿಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೀರ್ತಿ ತಂದೆ ಕೃಷ್ಣೇಗೌಡ ತನ್ನ ಪುತ್ರನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು ಈ ಬಗ್ಗೆ ತನಿಖೆ ಕೈಗೊಂಡರೆ ಸತ್ಯಾಂಶ ಹೊರ ಬೀಳಲಿದೆ ಎಂದು ತಿಳಿಸಿದ್ದಾರೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಿನ್ನೆ ರಾತ್ರಿ ವೇಳೆ ಘಟನೆ ಸಂಭವಿಸಿದ್ದು, ಇಂದು ಬೆಳಿಗ್ಗೆ ಯುವಕನ ಶವವು ನೇಣು ಬಿಗಿದ ಸ್ಥಿತಿಯಲ್ಲಿ ಮರವೊಂದರಲ್ಲಿ ನೇತಾಡುತ್ತಿದ್ದುದಾಗಿ ತಿಳಿದು ಬಂದಿದೆ.