ಮಡಿಕೇರಿ, ಮಾ. 22: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯವರು ವಿಚಾರಣೆಗೆ ಬಾಕಿ ಇರುವ ರಾಜಿಯಾಗುವಂತಹ ಪ್ರಕರಣಗಳನ್ನು ಏಪ್ರಿಲ್ 8 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಆಯಾಯ ನ್ಯಾಯಾಲಯದ ಆವರಣದಲ್ಲಿ ಇತ್ಯರ್ಥಪಡಿಸಲಾಗುತ್ತಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಬ್ಯಾಂಕ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ವ್ಯಾಜ್ಯಗಳು ಮತ್ತು ವಿಮಾ ಪ್ರಕರಣಗಳು, ಚೆಕ್ಕಿನ ಕ್ರಿಮಿನಲ್ ಪ್ರಕರಣಗಳು, ರಾಜಿಯಾಗಬಹುದಾದ ಎಲ್ಲಾ ಐಪಿಸಿ ಪ್ರಕರಣಗಳು ಹಾಗೂ ಎಲ್ಲಾ ರೀತಿಯ ರಾಜಿಯಾಗಬಹುದಾದ ಸಿವಿಲ್ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಇತ್ಯರ್ಥ ಪಡಿಸಲಾಗುತ್ತದೆ.

ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳು ಅಲ್ಲದೆ ಇನ್ನೂ ನ್ಯಾಯಾಲಯದಲ್ಲಿ ಸಲ್ಲಿಸದೆ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತಿದ್ದು, ವ್ಯಾಜ್ಯ ಪೂರ್ವ ಪ್ರಕರಣಗಳಾದ, ಬ್ಯಾಂಕ್ ಪ್ರಕರಣಗಳು, ಕಲಂ 138 ಎನ್ ಆಕ್ಟ್, ಚೆಕ್ಕಿನ ಪ್ರಕರಣಗಳು, ವಿದ್ಯುತ್, ದೂರವಾಣಿ, ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳು, ಜೀವನಾಂಶ ಮತ್ತು ಕೌಟುಂಬಿಕ ವ್ಯಾಜ್ಯಗಳು, ಕಾರ್ಮಿಕ ಪ್ರಕರಣಗಳು ಇತರ ಯಾವದೇ ರಾಜಿಯಾಗುವಂತಹ ಪ್ರಕರಣಗಳನ್ನು ಏಪ್ರಿಲ್ 8 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜಿ ಮಾಡಿಸಲು ಉತ್ತಮ ಅವಕಾಶ ಇರುವುದರಿಂದ ಅಂತಹ ಪ್ರಕರಣಗಳನ್ನು ಸಲ್ಲಿಸದೇ ಇದ್ದಲ್ಲಿ ಆಯಾಯ ನ್ಯಾಯಾಲಯದ ಆವರಣದಲ್ಲಿ ನಡೆಯುವ ಲೋಕ ಅದಾಲತ್ ಮುಂದೆ ತಂದು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿರುತ್ತಾರೆ.