ಸೋಮವಾರಪೇಟೆ, ಏ.17: ಮುಂಬರುವ ವಿಧಾನಸಭಾ ಚುನಾವಣೆಗೂ ಮೊದಲು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಸಂಘಟಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಬಿ.ಎ. ಜೀವಿಜಯ ಹೇಳಿದರು.

ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಅಧ್ಯಕ್ಷರಿಂದ ಜಿಲ್ಲೆಯಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಬೇಕೆಂದು ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಬದ್ಧತೆಯಿಂದ ಕೆಲಸ ಮಾಡಬೇಕು. ಯಾವದೇ ವದಂತಿ, ಗೊಂದಲಗಳಿಗೆ ಕಿವಿಗೊಡಬಾರದು ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದು, ಎಲ್ಲೆಡೆಯೂ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ತಾ. 21ರಂದು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಮಡಿಕೇರಿಗೆ ಭೇಟಿ ನೀಡಲಿದ್ದು, ಪಕ್ಷ ಸಂಘಟನೆ ಬಗ್ಗೆ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ನೀಡುವ ಬೆಳೆ ವಿಮೆಗೆ ಸಂಬಂಧಿಸಿದಂತೆ ವಿಮಾ ಹಣವನ್ನು ಸಂಗ್ರಹಿಸುತ್ತಿವೆ. ಇದರಿಂದ ರೈತರಿಗೆ ಯಾವದೇ ಪ್ರಯೋಜನವಿಲ್ಲ. ವಿಮೇ ಕಂತನ್ನು ಕಡ್ಡಾಯವಾಗಿ ಪಾವತಿಸುವಂತೆ ಸೂಚನೆ ಮಾಡಬಾರದು. ಬ್ಯಾಂಕ್‍ಗಳು ರೈತರ ಸಾಲಕ್ಕೆ ವಿಮಾ ಹಣವನ್ನು ಜಮಾ ಮಾಡಿಕೊಳ್ಳುತ್ತಿರುವದು ಸರಿಯಲ್ಲ. 2 ಲಕ್ಷ ರೂ.ಗಳ ಸಾಲ ಪಡೆದರೆ ರೈತರು 20 ಸಾವಿರ ರೂ.ಗಳನ್ನು ಬ್ಯಾಂಕಿಗೆ ಪಾವತಿ ಮಾಡಬೇಕಾಗುತ್ತದೆ. ಇಂತಹ ಅವೈಜ್ಞಾನಿಕ ಕ್ರಮವನ್ನು ತೆಗೆಯಬೇಕು ಎಂದರು.

ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್. ಸುರೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಮತ್ತು ಹೋಬಳಿ ಸಮಿತಿಗಳನ್ನು ಪುನರ್ ರಚಿಸುವದರೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ಗಮನ ನೀಡಲಾಗುವದೆಂದು ತಿಳಿಸಿದರು.

ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ, ರಾಜ್ಯ ಘಟಕದ ಕಾರ್ಯದರ್ಶಿ ವಿ.ಎಂ. ವಿಜಯ, ಕಾಟ್ನಮನೆ ವಿಠಲ್‍ಗೌಡ, ರಾಜೇಶ್, ರಾಮಕೃಷ್ಣ ಉಪಸ್ಥಿತರಿದ್ದರು.