ಮಡಿಕೇರಿ, ಏ. 18: ಜಿಲ್ಲೆಯ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಬಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿ.ಪಂ. ಇಂಜಿನಿಯರ್‍ಗಳು, ತಾ.ಪಂ. ಇಓಗಳು, ತಹಶೀಲ್ದಾರರು ಮತ್ತಿತರರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಕಾರ್ಮಾಡು ಇತರೆ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕೇಳಿಬರುತ್ತಿದ್ದು, ಈ ಬಗ್ಗೆ ಗಮನ ಹರಿಸಬೇಕು. ಕುಡಿಯುವ ನೀರು ವ್ಯತ್ಯಯ ಕಂಡುಬಂದರೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಹಾಗೆಯೇ ಜಾನುವಾರುಗಳಿಗೆ ಮೇವು ಕೊರತೆ ಕಂಡುಬರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ನಿರ್ದೇಶನ ನೀಡಿದರು.

ಕುಡಿಯುವ ನೀರು ಕಾಮಗಾರಿಗಳಿಗೆ

(ಮೊದಲ ಪುಟದಿಂದ) ಸಂಬಂಧಿಸಿದಂತೆ ಭೌತಿಕ ಪ್ರಗತಿ ಸಾಧಿಸಲಾಗಿದೆ. ಆದರೆ ಆರ್ಥಿಕ ಪ್ರಗತಿ ಆಗಿರುವದಿಲ್ಲ. ಆದ್ದರಿಂದ ಈ ಬಗ್ಗೆ ತ್ವರಿತ ಕ್ರಮ ತೆಗೆದುಕೊಳ್ಳಬೇಕು. ಅರ್ಥಿಕ ಪ್ರಗತಿ ಸಾಧಿಸಿದಾಗ ಮಾತ್ರ ಹೆಚ್ಚಿನ ಅನುದಾನ ದೊರೆಯಲು ಸಾಧ್ಯ ಎಂದು ಪ್ರಬಾರ ಜಿಲ್ಲಾಧಿಕಾರಿ ತಿಳಿಸಿದರು.

ಜಿ.ಪಂ. ಎಂಜಿನಿಯರ್‍ಗಳು, ತಾ.ಪಂ.ಇಒಗಳು ಮತ್ತು ಸ್ಥಳೀಯ ಆಡಳಿತಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸ ಬೇಕು. ಬರ ಸಮರ್ಪಕ ನಿರ್ವಹಣೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಚಾರುಲತಾ ಸೋಮಲ್ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಬಗ್ಗೆ ದೂರುಗಳು ಬರದಂತೆ ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸುವದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ. ಎಂಜಿನಿಯರ್ ರಾಜಕುಮಾರ್ ರೆಡ್ಡಿ, ಸೆಸ್ಕ್ ಇಇ ಸೋಮಶೇಖರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಹ್ಮದ್, ಪೌರಾಯುಕ್ತ ಬಿ. ಶುಭಾ, ತಹಶೀಲ್ದಾರರಾದ ಕುಸುಮ, ಕೃಷ್ಣ, ತಾ.ಪಂ. ಇಒಗಳಾದ ಪಡ್ನೇಕರ್, ಜೀವನ್ ಕುಮಾರ್, ಸತ್ಯನಾರಾಯಣ, ಜಿ.ಪಂ. ಎಇಇಗಳು ಇತರರು ಇದ್ದರು.