ಕೂಡಿಗೆ, ಆ. 21: ಕೇಂದ್ರ ಸರ್ಕಾರದ ಯೋಜನೆಗಳನ್ನು ಮತ್ತು ರಾಜ್ಯ ಸರ್ಕಾರದ ವೈಫಲ್ಯವನ್ನು ಬಿಜೆಪಿ ಕಾರ್ಯಕರ್ತರು ಮನೆಮನೆಗಳಿಗೆ ತಿಳಿಸುವ ಮೂಲಕ ಪಕ್ಷವನ್ನು ಬೂತ್‍ಮಟ್ಟದಿಂದ ಸಂಘಟಿಸಲು ಕಾರ್ಯಕರ್ತರು ದುಡಿಯಬೇಕಾಗಿದೆ. ಕೇಂದ್ರದ ಅಧ್ಯಕ್ಷರ ಸೂಚನೆಯ ಮೇರೆಗೆ ಪ್ರತಿಯೊಬ್ಬರೂ ಅವರವರ ಜವಾಬ್ದಾರಿಯಲ್ಲಿ ಈಗಾಗಲೇ ಬಿಜೆಪಿ ಸಿದ್ಧಾಂತ ಗಳಿಗನುಗುಣವಾಗಿ ಕಾರ್ಯನಿರ್ವ ಹಿಸುವಲ್ಲಿ ತೊಡಗಿ ದ್ದಾರೆ. ಈ ನಿಟ್ಟಿನಲ್ಲಿ ತಳಮಟ್ಟದಿಂದ ವಿವಿಧÀ ಸಮಿತಿಗಳ ರಚನೆಯ ಮೂಲಕ ಪಕ್ಷವನ್ನು ಸಧೃಡಗೊಳಿಸಲು ಕಾರ್ಯಕರ್ತರು ಸಿದ್ಧರಾಗಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಕರೆ ನೀಡಿದರು.

ಕೂಡಿಗೆಯ ಶ್ರೀ ರಾಮಲಿಂಗೇಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಬಿ.ಜೆ.ಪಿಯ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಈಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಮನಬಂದಂತೆ ವರ್ತಿಸಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಮೇಲೆ ಮೊಕದ್ದಮೆ ಹೂಡಲು ಇಲ್ಲಸಲ್ಲದ ಕುತಂತ್ರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡುತ್ತಾ, ಕೇಂದ್ರ ಸರ್ಕಾರದ ಜನಪರ ಯೋಜನೆ ಇಡೀ ದೇಶದಲ್ಲಿ ಜನಮನವಾಗಿದೆ. ಈ ಯೋಜನೆಗಳು ಗ್ರಾಮಾಂತರ ಪ್ರದೇಶದ ಜನರಿಗೆ ಸದುಪಯೋಗವಾಗಲು ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ನಿಯೋಜಿತ ಸಂದರ್ಭದಲ್ಲಿ ತಿಳಿಸುವ ಮೂಲಕ ಪ್ರಯೋಜನವನ್ನು ಸಾಮಾನ್ಯ ಜನರು ಪಡೆದುಕೊಳ್ಳುವಂತಾಗಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡುತ್ತಾ, ಸಿದ್ದರಾಮಯ್ಯ ಎ.ಸಿ.ಪಿ. ಅಧಿಕಾರಿ ಗಳನ್ನು ದುರ್ಬಳಕೆ ಮಾಡಿಕೊಂಡು ಆ ಮೂಲಕ ಮನಬಂದಂತೆ ನಡೆಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಯಶಸ್ಸಿಗೆ ಕಾರಣೀಭೂತರಾಗಬಹುದು ಎಂದರು.

ಇದೇ ಸಂದರ್ಭ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಕಾಫಿ ಬೋರ್ಡ್ ನಿರ್ದೇಶಕ ಜಿ.ಎಲ್. ನಾಗರಾಜ್ ಮತ್ತು ತಾಲೂಕು ಬಿ.ಜೆ.ಪಿ. ಉಪಾಧ್ಯಕ್ಷ ಕೆ.ಕೆ. ಭೋಗಪ್ಪ ಮಾತನಾಡಿದರು.

ಈ ವೇಳೆ ಮುಳ್ಳುಸೋಗೆ, ಕೂಡುಮಂಗಳೂರು ಮತ್ತು ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಪಕ್ಷದ ಕಾರ್ಯಕರ್ತರು ಬಿ.ಜೆ.ಪಿ. ಸೇರ್ಪಡೆಗೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಕೇಂದ್ರದ ಅಧ್ಯಕ್ಷ ಶಿವಾನಂದ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ಚಿಲ್ಲನ ಗಣಿಪ್ರಸಾದ್, ಒ.ಬಿ.ಸಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕುಮಾರಪ್ಪ, ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ನಿಸಾರ್ ಅಹಮ್ಮದ್, ಆರ್.ಎಂ.ಸಿ. ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ. ಸದಸ್ಯರಾದ ಸಬಿತಾ ಚೆನ್ನಕೇಶವ, ಗಣೇಶ್, ಪುಷ್ಪಾ, ಮುಳ್ಳುಸೋಗೆ ಗ್ರಾ.ಪಂ. ಅಧ್ಯಕ್ಷೆ ಭವ್ಯ ಸೇರಿದಂತೆ 3 ಗ್ರಾ.ಪಂ ವ್ಯಾಪ್ತಿಯ ಬಿ.ಜೆ.ಪಿ. ಸದಸ್ಯರು ಹಾಗೂ ಕೂಡುಮಂಗಳೂರು ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಯುವಮೋರ್ಚಾ ಅಧ್ಯಕ್ಷ ಶಶಿಕಿರಣ್ ಮತ್ತು ಸಾವಿರಾರು ಕಾರ್ಯಕರ್ತರು ಇದ್ದರು.