ಕುಶಾಲನಗರ, ಸೆ. 5: ನಿಗದಿತ ಅವಧಿಯೊಳಗೆ ಕುಶಾಲನಗರ ಒಳಚರಂಡಿ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ತಿಳಿಸಿದ್ದಾರೆ.
ಅವರು ಮಂಗಳವಾರ ಕುಶಾಲನಗರಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಮತ್ತು ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ಒಳಚರಂಡಿ ಯೋಜನಾ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ನಿರ್ದಿಷ್ಟ ಅವಧಿಯೊಳಗೆ ಕೆಲಸ ಪೂರ್ಣಗೊಳ್ಳಲಿದೆ. ಶುದ್ಧೀಕರಣ ಘಟಕದ ಸ್ಥಳ ಈಗಾಗಲೆ ಗುರುತಿಸಲಾಗಿದ್ದು ನಿಯಮಾನುಸಾರ ಕಾಮಗಾರಿ ನಡೆಯಲಿದೆ ಎಂದು ಹೇಳಿದರು.
ಕುಶಾಲನಗರ ಪಟ್ಟಣದ ಗುಂಡೂರಾವ್ ಬಡಾವಣೆಯಲ್ಲಿ ಹೌಸ್ ಫಾರ್ ಆಲ್ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಮತ್ತು ಉಪತಹಶೀಲ್ದಾರ್ ನಂದಕುಮಾರ್ ಅವರೊಂದಿಗೆ ಚರ್ಚಿಸಿದರು.
ಪಟ್ಟಣದ ವಿವೇಕಾನಂದ ಬಡಾವಣೆಯಲ್ಲಿ ಪೌರಕಾರ್ಮಿಕರಿಗೆ ನಿರ್ಮಾಣವಾಗುತ್ತಿರುವ ಮನೆ ಕಟ್ಟಡಗಳ ಕಾಮಗಾರಿ ಪರಿಶೀಲನೆ ನಡೆಸಿದರು. ಕುಶಾಲನಗರ ಪಟ್ಟಣ ಪಂಚಾಯಿತಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಗೊಳ್ಳಲಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾಹಿತಿ ಕಲೆ ಹಾಕಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಅಭಿಯಂತರರಾದ ಶ್ರೀದೇವಿ ಇದ್ದರು.