ಮಡಿಕೇರಿ, ಅ.9: ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ಹೆಸರಿನಲ್ಲಿ ನೀಲನಕ್ಷೆ ಮತ್ತು ಅನುಷ್ಠಾನ ಕಾರ್ಯ ಯೋಜನೆಯನ್ನು ಸಿದ್ಧಪಡಿಸಲು ಈಗಾಗಲೇ ಕಾರ್ಯಾರಂಭ ಮಾಡಿದ್ದು, ಆ ನಿಟ್ಟಿನಲ್ಲಿ ಪ್ರಥಮ ಹಂತದಲ್ಲಿ ಪೂರ್ವ ಯೋಜನಾ (ಅಡ್ವಾನ್ಸ್ ಟೀಂ) ತಂಡವು ತಾ. 10 ರಂದು (ಇಂದು) ನಗರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಷನ್-2025 ಡಾಕ್ಯುಮೆಂಟ್ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರವು 13 ವಲಯಗಳನ್ನಾಗಿ ಗುರುತಿಸಿದ್ದು, ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳು, ಮೂಲ ಸೌಕರ್ಯಗಳಾದ ರಸ್ತೆ, ವಿದ್ಯುತ್ಚ್ಛಕ್ತಿ, ನೀರಾವರಿ ಸೌಲಭ್ಯ, ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ, ಉದ್ಯೋಗ ಮತ್ತು ಕೌಶಲ್ಯ, ಕೈಗಾರಿಕಾ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಆರೋಗ್ಯ ಮತ್ತು ಪೋಷಣೆ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಮಾಹಿತಿ ಸಂಪರ್ಕ ತಂತ್ರಜ್ಞಾನ, ಸೇವೆಗಳು, ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಹೀಗೆ ನಾನಾ ಇಲಾಖೆಗಳನ್ನೊಳಗೊಂಡಂತೆ ಮುಂದಿನ ಏಳು ವರ್ಷದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವ ರೀತಿ ದೂರದೃಷ್ಟಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂಬ ಬಗ್ಗೆ ಅಗತ್ಯ ಮಾಹಿತಿ ಒದಗಿಸಬೇಕಿದೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯಗಳನ್ನು ರೂಪಿಸಬಹುದು. ಹಾಗೆಯೇ ಭತ್ತ ಬೆಳೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವದು. ಕಾಫಿ, ಏಲಕ್ಕಿ, ಕರಿಮೆಣಸು ಹೀಗೆ ನಾನಾ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುಂತೆ ಸಲಹೆ ಮಾಡಿದರು.
ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ರಸ್ತೆ, ಕುಡಿಯುವ ನೀರು, ವಿದ್ಯುತ್ಚ್ಚಕ್ತಿ ಹಾಗೂ ನೈರ್ಮಲ್ಯೀಕರಣಕ್ಕೆ ಒತ್ತು ನೀಡುವದು. ಉದ್ಯೋಗ ಮತ್ತು ಕೌಶಲ್ಯ ಸಂಬಂಧ ಇನ್ನಷ್ಟು ಕಾರ್ಯಕ್ರಮ ರೂಪಿಸುವದು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಜೊತೆಗೆ ಕಾಲೋನಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವದು, ಉನ್ನತ ಶಿಕ್ಷಣಕ್ಕೆ ಕ್ರಮ ಕೈಗೊಳ್ಳುವದು ಆರೋಗ್ಯ ಸೇವೆ ಇನ್ನಷ್ಟು ಹತ್ತಿರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳುವದು. ಹಾಗೆಯೇ ಎಲ್ಲಾ ಪ್ರಾಥಮಿಕ ಮತ್ತು ಸಮುದಾಯ ಆಸ್ಪತ್ರೆಗಳಲ್ಲಿ ವೈದ್ಯರ ನಿಯೋಜನೆ ಮಾಡಲು ಕ್ರಮಕೈಗೊಳ್ಳುವದು, ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನವನ್ನು ಕುಗ್ರಾಮಗಳಿಗೆ ತಲುಪಿಸುವದು ಹೀಗೆ ಏಳು ವರ್ಷಗಳ ದೂರದೃಷ್ಟಿಯ ನೀಲನಕ್ಷೆ ಮತ್ತು ಅನುಷ್ಠಾನ ಕಾರ್ಯಗಳ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಪ್ರಥಮ ಹಂತದಲ್ಲಿ ಮಾಹಿತಿ ಪಡೆಯುವ ಸಭೆ ನಡೆಯಲಿದೆ ಎಂದು ಅವರು ಹೇಳಿದರು. ಜಿಲ್ಲೆಯ ಅಭಿವೃದ್ಧಿ ಸಂಬಂಧಿಸಿದಂತೆ ಸ್ಟಾಕ್ ಹೋಲ್ಡರ್ ಸೇರಿದಂತೆ ಹಲವರ ಜೊತೆ ಪ್ರಮುಖ ಸಭೆಯು ತಾ. 31 ರಂದು ನಡೆಯಲಿದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ ಸರ್ಕಾರದ ವಿಷನ್-2025 ಡಾಕ್ಯುಮೆಂಟ್ ಸಮಗ್ರ ಅಭಿವೃದ್ಧಿಯ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರವು ಪಂಚವಾರ್ಷಿಕ ಯೋಜನಾ ಮಾದರಿಯಲ್ಲಿ ಅನುಷ್ಠಾನ ಗೊಳಿಸುತ್ತಿದ್ದು, ಈ ಸಂಬಂಧ ತಮ್ಮ ಇಲಾಖಾ ವ್ಯಾಪ್ತಿಯಿಂದ ಅಗತ್ಯ ಮಾಹಿತಿಯನ್ನು ಸಿದ್ದಪಡಿಸಿ ಕೊಳ್ಳುವಂತೆ ತಿಳಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಸಿದ್ದಲಿಂಗಮೂರ್ತಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ರಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಎಂ.ದಾನೋಜಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಜಿ.ಪಂ. ಎಂಜಿನಿಯರ್ ರಾಜ್ ಕುಮಾರ್ ರೆಡ್ಡಿ, ಎನ್.ಐ.ಸಿ. ಅಜಿತ್ ಇತರರು ತಮ್ಮ ಇಲಾಖೆ ವ್ಯಾಪ್ತಿಯ ಹಲವು ಮಾಹಿತಿ ನೀಡಿದರು.