ಮಡಿಕೇರಿ, ಜ. 18: ನೂತನ ಪಿಂಚಣಿ ಯೋಜನೆಯಿಂದ ಬಾಧಿತವಾಗಿರುವ ನೌಕರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ, ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ 6ನೇ ವೇತನ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಸೋಮವಾರಪೇಟೆ: ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಅನಿಶ್ಚಿತ ಹಾಗೂ ಅಭದ್ರತೆಯಿಂದ ಕೂಡಿರುವ ಕೇಂದ್ರ ಸರ್ಕಾರದ ನೂತನ ಪಿಂಚಣಿ ಯೋಜನೆ ಯಿಂದಾಗಿ ರಾಷ್ಟ್ರದಾದ್ಯಂತ ನೌಕರರು ಮತ್ತು ಕಾರ್ಮಿಕರು ಅನ್ಯಾಯಕ್ಕೆ ಒಳಗಾಗಿದ್ದಾರೆ. ಈ ಯೋಜನೆಯನ್ನು ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸರ್ಕಾರಗಳು ನೂತನ ಪಿಂಚಣಿ ಯೋಜನೆಯನ್ನು ಅಳವಡಿಸಿ ಕೊಂಡಿವೆ. ಕರ್ನಾಟಕ ರಾಜ್ಯ ಸರ್ಕಾರ 2006ರಲ್ಲಿ ಈ ಯೋಜನೆಯನ್ನು ಅಳವಡಿಸಿ ಕೊಂಡಿದ್ದು, ನಂತರ ರಾಜ್ಯದಲ್ಲಿ ನೇಮಕಗೊಂಡ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯದಲ್ಲಿ ನ್ಯೂನತೆ ಉಂಟಾಗಿದೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು, 1.80 ಲಕ್ಷ ಸರ್ಕಾರಿ ನೌಕರರು ನಿವೃತ್ತಿ ಸಂದರ್ಭದಲ್ಲಿ ಪಿಂಚಣಿ ಮತ್ತು ಇನ್ನಿತರ ಸವಲತ್ತುಗಳಿಂದ ವಂಚಿತ ರಾಗಲಿದ್ದಾರೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷ ಕೆ.ಎಸ್. ಪ್ರಸನ್ನ ಕುಮಾರ್ ಹೇಳಿದರು.

ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಎಚ್.ಎನ್. ಮಂಜುನಾಥ್, ಸತೀಶ್, ರಾಜಪ್ಪ, ಶಿವಕುಮಾರ್ ಮತ್ತಿತರರು ಇದ್ದರು.