ಮಡಿಕೇರಿ, ಜ. 22: ಜೀವನದಿ ಕಾವೇರಿ ಕಲುಷಿಕೆಗೊಳ್ಳುವದನ್ನು ತಪ್ಪಿಸಿ ಸಂರಕ್ಷಣೆಗೆ ಬಜೆಟ್‍ನಲ್ಲಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರಿಗೆ ಮನವಿ ಸಲ್ಲಿಸಿದರು.

ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮನವಿ ಸಲ್ಲಿಸಿದ್ದು, ನದಿಗಳ ಸಂರಕ್ಷಣೆಗೆ ರಾಜ್ಯ ಸರಕಾರದ ಮೂಲಕ ಕಟ್ಟುನಿಟ್ಟಿನ ಕಾನೂನು ಅನುಷ್ಠಾನಕ್ಕೆ ತರುವದು, ತದನಂತರ ಬಜೆಟ್‍ನಲ್ಲಿ ನದಿ ತಟಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸುವದು, ಈ ಮೂಲಕ ಕಾವೇರಿ ನದಿಯ ಸಂರಕ್ಷಣೆಗೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭ ಕಾವೇರಿ ನದಿ ಜಾಗೃತಿ ಸಮಿತಿ ಪ್ರಮುಖರಾದ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್ ಇದ್ದರು.