ಕುಶಾಲನಗರ, ಫೆ. 8 : ರೈತಾಪಿ ವರ್ಗ ಹಾಗೂ ಮಾರುಕಟ್ಟೆ ನಡುವೆ ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ಇಲಾಖೆಗಳು ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಿ.ಎ. ಹರೀಶ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೊಡಗು ಮತ್ತು ಹಾಸನ ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯ ದಲ್ಲಿ ಕುಶಾಲನಗರದಲ್ಲಿ ಕೂರ್ಗ್ ಆರ್ಗಾನಿಕ್ಸ್ ಸಾವಯವ ಆಹಾರ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದರು.

ಜನರು ಉತ್ತಮ ಆಹಾರ ಪದಾರ್ಥಗಳನ್ನು ಬಳಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕೆಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸಾವಯವ ಗೊಬ್ಬರ ಬಳಕೆ ಮೂಲಕ ವಿಷಕಾರಿ ರಾಸಾಯನಿಕ ಗೊಬ್ಬರ ಬಳಕೆಗೆ ಇತಿಶ್ರೀ ಹಾಡಬೇಕು. ಆಹಾರ ಪದ್ದತಿ ಬದಲಾವಣೆಯಾದಲ್ಲಿ ಅನಾರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಮನುಷ್ಯರ ದೀರ್ಘ ಬಾಳಿಕೆಗೆ ಸಾವಯವ ಆಹಾರ ಉತ್ಪನ್ನಗಳನ್ನು ಬಳಸುವಂತೆ ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕ ಡಾ.ಕೆ.ರಾಮಪ್ಪ, ರೈತರನ್ನು ಆರ್ಥಿಕವಾಗಿ ಶಕ್ತರನ್ನಾಗಿ ಬಲಪಡಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ 13 ಗ್ರಾಮಗಳಲ್ಲಿ 100 ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 100 ರೈತರಿಗೆ ಸಾವಯವ ಕೃಷಿ ಉತ್ಪನ್ನ ಬೆಳೆಯಲು ಒಕ್ಕೂಟ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾವಯವ ಕೃಷಿ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಅರಿವು ಮೂಡಿಸುವದು, ತಾಂತ್ರಿಕತೆ ಬಳಕೆ ಬಗ್ಗೆ ರೈತರಿಗೆ ತರಬೇತಿ ನೀಡುವದು, ಒಕ್ಕೂಟದ ಪ್ರಮುಖ ಯೋಜನೆಗಳಾಗಿವೆ. ಜಿಲ್ಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಭತ್ತದ ಮಿಲ್ ಮಾಡುವ ಬಗ್ಗೆ ಒಕ್ಕೂಟ ಕಾರ್ಯಯೋಜನೆ ರೂಪಿಸಿದೆ ಎಂದು ಮಾಹಿತಿ ಒದಗಿಸಿದರು.

ತಾಲೂಕು ಪಂಚಾಯ್ತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಕೆ.ಆರ್.ಮಂಜುಳಾ, ಕೊಡಗು ಮತ್ತು ಹಾಸನ ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಒಕ್ಕೂಟದ ಅಧ್ಯಕ್ಷ ವೈ.ಸಿ. ರುದ್ರಪ್ಪ, ಉಪಾಧ್ಯಕ್ಷ ಎಂ.ಕೆ. ಮುತ್ತಪ್ಪ, ತಾಲೂಕು ಪಂಚಾಯಿತಿ ಸದಸ್ಯರಾದ ಬಲ್ಲಾರಂಡ ಮಣಿ ಉತ್ತಪ್ಪ, ಸಬಿತಾ ಚನ್ನಕೇಶವ್, ಕೃಷಿಕ ಸಮಾಜ ಉಪಾಧ್ಯಕ್ಷ ಎಂ.ಆರ್.ಗೋವಿಂದರಾಜು, ಜಂಟಿ ಕೃಷಿ ನಿರ್ದೇಶಕ ಡಾ.ಕೆ. ರಾಮಪ್ಪ, ಅಧಿಕಾರಿಗಳಾದ ಡಾ.ಕೆ. ರಾಜು, ಡಾ.ರಾಜಶೇಖರ್, ಪಿ.ಪಿ.ಪೂಣಚ್ಚ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಎನ್. ಮೊಣ್ಣಪ್ಪ, ಪ್ರಗತಿಪರ ಕೃಷಿಕ ಹೆಚ್.ಕೆ. ಚಂದ್ರಪ್ಪ ಇದ್ದರು.