ಮಡಿಕೇರಿ, ಫೆ.27 : ಪ್ಲಾಸ್ಟಿಕ್ ನಿಷೇಧ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ನಿಯಮಗಳನ್ನು ಪಾಲಿಸದಿರುವ ಅಂಗಡಿಗಳ ಪರವಾನಗಿ ರದ್ದುಪಡಿಸುವಂತೆ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ಲಾಸ್ಟಿಕ್ ನಿಷೇಧ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮ ಪಂಚಾಯಿತಿ. ನಗರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈಗಾಗಲೇ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದರೂ ಸಹ ಪರಿಣಾಮಕಾರಿಯಾಗಿ ಅನುಷ್ಠಾನವಾಗಿಲ್ಲ ಎಂಬ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವದು ಅಗತ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.
ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾ.ಪಂ.ವ್ಯಾಪ್ತಿಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಬೇಕು. ಇದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇದರ ಜೊತೆಗೆ ಅಂಗಡಿ ಪರವಾನಗಿ ರದ್ದು ಪಡಿಸಲಾಗುವದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಕಾವೇರಿ ನದಿ ಪಾತ್ರದಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿನ ಕಲುಷಿತ ನೀರು ಬಿಡದಂತೆ ಎಚ್ಚರಿಕೆ ವಹಿಸಬೇಕು. ಪ್ಲಾಸ್ಟಿಕ್ಗಳನ್ನು ಬಳಸದಂತೆ ಜನರಲ್ಲಿ ಜಾಗೃತಿ ಮೂಡಿಸುವದು ಅತ್ಯಗತ್ಯ ಎಂದು ಅವರು ಹೇಳಿದರು.
ಹೊಟೇಲ್ಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇತರೇ ಪ್ರವಾಸಿ ಸ್ಥಳಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ನಾಮಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು. ಇದನ್ನು ಉಲ್ಲಂಘಿಸಿದಲ್ಲಿ ಕಾಯ್ದೆ ಪ್ರಕಾರ ದಂಡ ವಿಧಿಸಬೇಕು ಎಂದು ಹೇಳಿದರು.
ಪರಿಸರ ಅಧಿಕಾರಿ ಗಣೇಶ್ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ. ಎಂದರು.ಪವನ್ ಅಯ್ಯಪ್ಪ ಮಾತನಾಡಿ, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿದ್ದರೂ, ಪರಿಣಾಮಕಾರಿಯಾಗಿ ಅನುಷ್ಠಾನವಾಗಿಲ್ಲ ಅವರು ಹೇಳಿದರು.
ಅರುಣ್ ಅಪ್ಪಚ್ಚು ಮಾತನಾಡಿ, ಸ್ವಚ್ಛ ಕೊಡಗು ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದಾಗ ಮಾತ್ರ ಪ್ಲಾಸ್ಟಿಕ್ ನಿಷೇಧ ಅನುಷ್ಠಾನಗೊಳಿಸಲು ಸಾಧ್ಯ ಎಂದು ಹೇಳಿದರು.
ಸಿದ್ದಾಪುರ, ಗೋಣಿಕೊಪ್ಪ, ನೆಲ್ಯಹುದಿಕೇರಿ, ಭಾಗಮಂಡಲ, ದುಬಾರೆ, ಅಬ್ಬಿಜಲಪಾತ ಮತ್ತಿತರ ಕಡೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಅತಿ ಹೆಚ್ಚಾಗಿದೆ ಸುನೀಲ್ ಉತ್ತಪ್ಪ ತಿಳಿಸಿದರು.
ಮೋಂತಿ ಗಣೇಶ್ ಮಾತನಾಡಿ ಮಡಿಕೇರಿ ನಗರದಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೆಚ್ಚಿನ ಅರಿವು ಇದೆ. ಉಳಿದ ಕಡೆಗಳಲ್ಲಿ ಇನ್ನಷ್ಟು ಅರಿವು ಮೂಡಿಸಬೇಕಿದೆ ಎಂದು ಸಲಹೆ ಮಾಡಿದರು.
ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಸಂಚಾಲಕ ಚಂದ್ರಮೋಹನ್ ಮಾತನಾಡಿ, ಕುಶಾಲನಗರ ಬಳಿ ಕಾವೇರಿ ನದಿಗೆ ಕಲುಷಿತ ನೀರನ್ನು ಬಿಡಲಾಗುತ್ತಿದ್ದು, ಇದನ್ನು ತಡೆಯಲಾಗಿದೆ ಕಾವೇರಿ ನದಿ ಪಾತ್ರದಲ್ಲಿ ಕಲುಷಿತ ನೀರು ಬಿಡದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಸಿದ್ದಲಿಂಗಮೂರ್ತಿ, ನಗರಾಭಿವೃದ್ಧಿ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಗೋಪಾಲ ಕೃಷ್ಣ, ಪೌರಾಯುಕ್ತ ಬಿ.ಶುಭಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ, ನಾಚಪ್ಪ, ಕೃಷ್ಣ ಪ್ರಸಾದ್, ತಹಶೀಲ್ದಾರ್ ಗೋವಿಂದರಾಜು, ನಗರ ಸಭೆಯ ಹಿರಿಯಾಧಿಕಾರಿ ರಮೇಶ್, ತಾಲೂಕು ಪಂಚಾಯಿತಿ ಸಿಇಒ ಜೀವನ್ ಕುಮಾರ್ ಇತರರು ಇದ್ದರು.