ಸೋಮವಾರಪೇಟೆ, ಮಾ. 23: ಎಲ್ಲಾ ಜೀವಿಗಳಿಗೂ ಅಗತ್ಯವಾಗಿರುವ ನೀರಿಗಾಗಿ ಮುಂದಿನ ದಿನಗಳಲ್ಲಿ ಯುದ್ಧ ನಡೆದರೂ ಆಶ್ಚರ್ಯ ಪಡಬೇಕಿಲ್ಲ ಎಂದು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಎಚ್ಚರಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಜಲ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಿವಿಲ್ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಮಾತನಾಡಿ, ಜೀವಜಲದ ಬಗ್ಗೆ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ನದಿ ದಂಡೆಗಳಲ್ಲಿ ಹೋಂಸ್ಟೇ, ರೆಸಾರ್ಟ್, ಫ್ಯಾಕ್ಟರಿ, ಮಾಂಸದ ಅಂಗಡಿಗಳಿಗೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಹೇಮಚಂದ್ರ ಉಪಸ್ಥಿತರಿದ್ದರು.