ಮಡಿಕೇರಿ, ಮಾ. 25: ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2018-19ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಬೇಕಾಗಿದ್ದ ಪ್ರವೇಶ ಪರೀಕ್ಷೆಗೆ ಉಚ್ಚ ನ್ಯಾಯಾಲಯದಲ್ಲಿ ತಡೆಯಾಜ್ಞೆ ನೀಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ತಡೆಯಾಜ್ಞೆಯನ್ನು ತೆರವುಗೊಳಿಸಿರುವದರಿಂದ, ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 15 ರಂದು ರಾಜ್ಯಾದ್ಯಂತ ನಡೆಸಲು ತೀರ್ಮಾನಿಸಲಾಗಿದ್ದು, ಮತ್ತೊಮ್ಮೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ತಾ. 31 ರೊಳಗೆ ಸಲ್ಲಿಸಲು ಕೊನೆಯ ದಿನವಾಗಿದೆ. ಸ್ವೀಕೃತಿಗೊಂಡ ಅರ್ಜಿಗಳನ್ನು ಏಪ್ರಿಲ್ 3 ರಂದು ನಿಗದಿತ ನಮೂನೆಯಲ್ಲಿ ಕೇಂದ್ರ ಕಚೇರಿಗೆ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಉಪ ನಿರ್ದೇಶಕರು ತಿಳಿಸಿದ್ದಾರೆ.