ಕುಶಾಲನಗರ, ಮೇ 25: ಕುಶಾಲನಗರದಲ್ಲಿ ಒಳಚರಂಡಿ ಕಾಮಗಾರಿ ಆರಂಭಗೊಂಡು 4 ವರ್ಷಗಳು ಕಳೆದರೂ ಕೂಡ ಪೂರ್ಣಗೊಂಡಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಕುಶಾಲನಗರ ಬಿಜೆಪಿ ನಗರಾಧ್ಯಕ್ಷ ಕೆ.ಜಿ.ಮನು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿಮನೆಯಲ್ಲಿ ನಡೆದ ಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಕೋಟಿ ರೂಗಳ ಯೋಜನೆಯಾದ ಯುಜಿಡಿ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಕಾಮಗಾರಿ ಕುಂಟುತ್ತಾ ಸಾಗಿ ಇದೀಗ ಕೆಲವು ತಿಂಗಳಿನಿಂದ ಸ್ಥಗಿತಗೊಂಡಿದೆ. ಈ ಬಗ್ಗೆ ಈಗಾಗಲೆ ಹಲವು ರೀತಿಯಲ್ಲಿ ಅಧಿಕಾರಿಗಳ ಗಮನ ಸೆಳೆಯಲಾಗಿದ್ದರೂ ಕೂಡ ಯಾವದೇ ಪ್ರಯೋಜನ ಉಂಟಾಗಿಲ್ಲ. ಮುಂದಿನ 1 ವಾರದ ಅವಧಿಯೊಳಗೆ ಸಂಬಂಧಿಸಿದವರು ಸೂಕ್ತ ಕ್ರಮಕೈಗೊಂಡು ಕಾಮಗಾರಿ ಆರಂಭಿಸದಿದ್ದಲ್ಲಿ ಸ್ಥಳೀಯ ಸಂಘಸಂಸ್ಥೆಗಳು, ಸಾರ್ವಜನಿಕರ ಸಹಕಾರದೊಂದಿಗೆ ಬೀದಿಗಿಳಿದು ಪ್ರತಿಭಟಿಸಲಾಗುವದು ಎಂದು ಎಚ್ಚರಿಸಿದ್ದಾರೆ.