ಸಿದ್ದಾಪುರ, ಜೂ. 6: ಜಿಲ್ಲೆಯಲ್ಲಿ ನಿರಂತರವಾಗಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ಹಾವಳಿಯನ್ನು ತಡೆಗಟ್ಟಲು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನೊಳಗೊಂಡು ಜಿಲ್ಲಾ ರೈತರು, ಕಾರ್ಮಿಕರ ಅರಣ್ಯ ಹೋರಾಟ ಸಮಿತಿಯನ್ನು ರಚಿಸಿ, ಅರಣ್ಯ ಭವನದಲ್ಲಿ ಬೃಹತ್ ಪ್ರತಿಭಟನೆ ಕೂಡ ಮಾಡಲಾಗಿತ್ತು. ಇದೀಗ ಹೋರಾಟದ ಫಲವಾಗಿ ಜಿಲ್ಲೆಯಲ್ಲಿ ಮತ್ತೆ ಎರಡು ಕಾಡಾನೆಗಳನ್ನು ಹಿಡಿಯಲು ಅನುಮತಿ ದೊರೆತಿರುವ ಬಗ್ಗೆ ‘ಶಕ್ತಿ’ಗೆ ರಾಜ್ಯ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ಸಿದ್ದಾಪುರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಕಾಫಿ ತೋಟಗಳಲ್ಲಿ ಕಾಡಾನೆಯ ಹಿಂಡು ಬೀಡುಬಿಟ್ಟು ಮಾನವನ ಮೇಲೆ ಧಾಳಿ ನಡೆಸಿ ಹತ್ಯೆ ಮಾಡುತ್ತಿರುವ ಘಟನೆಗಳು ಮರುಕಳಿಸುತ್ತಿವೆ. ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ದಾಂಧಲೆ ನಡೆಸಿ ಫಸಲುಗಳನ್ನು ನಾಶ ಮಾಡುತ್ತಿದ್ದು, ಭತ್ತದ ಕೃಷಿ ಗದ್ದೆಗಳಿಗೆ ಲಗ್ಗೆಯಿಟ್ಟು ಫಸಲನ್ನು ಧ್ವಂಸಗೊಳಿಸುತ್ತಿವೆ. ಕಾಡಾನೆ ಮಾನವ ಸಂಘರ್ಷದಿಂದಾಗಿ ಬೆಳೆಗಾರರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ನೆಮ್ಮದಿ ಇಲ್ಲಂತಾಗಿದೆ. ಸಿದ್ದಾಪುರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ರಾಜಾರೋಷವಾಗಿ ಸುತ್ತಾಡುತ್ತಿದ್ದು, ಹಲವರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಕಾಡಾನೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಸಮಿತಿಯ ಪದಾಧಿಕಾರಿಗಳು ನಿರಂತರವಾಗಿ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಆಗಿಂದ್ದಾಗೆ ಮನವಿ ನೀಡುತ್ತಿದ್ದು, ಇದೀಗ ಸರಕಾರ ಒಂದು ಹೆಣ್ಣಾನೆ ಹಾಗೂ ಒಂದು ಗಂಡಾನೆ ಸೇರಿ 2 ಕಾಡಾನೆಗಳನ್ನು ಸೆರೆ ಹಿಡಿಯಲು ಅನುಮತಿ ನೀಡಿದೆ.

ಸಿದ್ದಾಪುರ ಭಾಗದಲ್ಲಿ ಅತಿ ಹೆಚ್ಚು ಕಾಡಾನೆ ಹಾವಳಿ ಇದ್ದು, ಸಮಿತಿಯು ಕನಿಷ್ಟ 15 ಕಾಡಾನೆಗಳನ್ನು ಸೆರೆ ಹಿಡಿಯಬೇಕೆಂದು ವೀರಾಜಪೇಟೆ ಅರಣ್ಯ ಭವನದಲ್ಲಿ ರಾಜ್ಯ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮನವಿ ಪತ್ರ ನೀಡಿ ಒತ್ತಾಯಿಸಲಾಗಿತ್ತು. ಆದರೇ ಇದೀಗ ಕೇವಲ 2 ಕಾಡಾನೆಗಳನ್ನು ಹಿಡಿಯುವ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಮತ್ತಷ್ಟು ಕಾಡಾನೆಗಳನ್ನು ಸೆರೆ ಹಿಡಿದು ಕಾಡಿಗೆ ಕಳುಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ದಾಂಧÀಲೆ ನಡೆಸುತ್ತಿರುವ ಎರಡು ಕಾಡಾನೆಯನ್ನು ಸೆರೆ ಹಿಡಿಯಲು ಅನುಮತಿ ದೊರಕಿದ್ದು, ವೀರಾಜಪೇಟೆ ತಾಲೂಕಿನ ಸಿದ್ದಾಪುರ ಭಾಗದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ಪ್ರಸ್ತಾವನೆ ಬಂದಲ್ಲಿ ಸೆರೆ ಹಿಡಿಯಲು ಅನುಮತಿ ಪಡೆದು ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಸೆರೆಹಿಡಿಯಲಾಗುವದು ಎಂದು ರಾಜ್ಯ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ. -ಎ.ಎನ್. ವಾಸು