ಸೋಮವಾರಪೇಟೆ, ಜೂ. 24: ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಲೂರು ಸಿದ್ದಾಪುರದಲ್ಲಿ ನಡೆಸಲು ನಿರ್ಧರಿಸಲಾಯಿತು.

ಇಲ್ಲಿನ ಕಸಾಪ ಭವನದಲ್ಲಿ ನಡೆದ ಕೊಡಗು ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಜಂಟಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

ಜಿಲ್ಲಾ ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್‍ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಲೂರು ಸಿದ್ದಾಪುರ ಗ್ರಾಮದಲ್ಲಿ ಆಚರಿಸುವ ಕುರಿತು ಜಿಲ್ಲಾ ಅಧ್ಯಕ್ಷರು ನೀಡಿದ ಸಲಹೆಯನ್ನು ಸಭೆಯು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ಜೂನ್ ಅಂತ್ಯದೊಳಗೆ ಸಾಹಿತ್ಯ ಪರಿಷತ್‍ನ ಪದಾಧಿಕಾರಿಗಳು ಹಾಗೂ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿಯ ಪ್ರಮುಖರು ಹಾಗೂ ಗ್ರಾಮಸ್ಥರೊಂದಿಗೆ ಸಮ್ಮೇಳನದ ರೂಪುರೇಷೆ ಕುರಿತು ಚರ್ಚಿಸುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ತಾಲೂಕು ಕ.ಸಾ.ಪ. ಅಧ್ಯಕ್ಷ ಎಸ್.ಡಿ. ವಿಜೇತ್, ಜಿಲ್ಲಾ ಕಸಾಪ ಕೋಶಾಧಿಕಾರಿ ಎಸ್.ಎ. ಮುರಳೀಧರ್, ಮಾಧ್ಯಮ ಪ್ರತಿನಿಧಿ ಅಶ್ವಥ್‍ಕುಮಾರ್, ಜಿಲ್ಲಾ ನಿರ್ದೇಶಕ ತೇಲಪಂಡ ಕವನ್ ಕಾರ್ಯಪ್ಪ, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಕೆ.ಎ. ಆದಮ್, ಖಜಾಂಜಿ ಎ.ಪಿ. ವೀರರಾಜು, ನಿಕಟಪೂರ್ವ ಅಧ್ಯಕ್ಷ ಎಚ್.ಜೆ.ಜವರಪ್ಪ, ಶನಿವಾರಸಂತೆ ಹೋಬಳಿ ಘಟಕದ ಅಧ್ಯಕ್ಷ ಸಿ.ಎಂ. ಪುಟ್ಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.