ವೀರಾಜಪೇಟೆ, ಜು. 1: ಯಾವದೇ ದೇಶ ಬೆಳವಣಿಗೆ ಹೊಂದಲು ಕಾರ್ಮಿಕರ ಶ್ರಮ ಬೆನ್ನೆಲುಬು. ಕಾರ್ಮಿಕರ ಸೇವೆಯು ಇಂದಿನ ಸಮಾಜಕ್ಕೆ ಅಮೋಘ ವಾದದ್ದು. ಕಾರ್ಮಿಕರು ಸಂಘಟನೆಗಳ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಅಪರ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕರಿಗೆ ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಾರ್ಮಿಕರನ್ನು ಮೇಲು ಕೀಳೆಂಬ ಮನೋಭಾವದಿಂದ ಕಾಣದೆ ಸಮಾನತೆಯನ್ನು ಪಾಲಿಸಬೇಕು, ಕಾನೂನು ಸೇವೆಗಳ ಸಮಿತಿಯಿಂದ ನೀಡುತ್ತಿರುವ ಉಚಿತ ಕಾನೂನಿನ ಅರಿವನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳು ವಂತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಎಂ. ನಂಜಪ್ಪ ಮಾತನಾಡಿ, ಇಂದಿನ ಕಾಲದಲ್ಲಿ ಕಾರ್ಮಿಕರಿಲ್ಲದೆ ಬದುಕಿಲ್ಲ. ಅನೇಕ ಕಾರ್ಮಿಕರಿಗೆ ಬಡತನದೊಂದಿಗೆ ವಿದ್ಯಾಭ್ಯಾಸದ ಕೊರತೆ ಇದೆ. ಕಾರ್ಮಿಕರನ್ನು ದುಡಿಸಿಕೊಳ್ಳುವವರು ಅವರಿಗೆ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡಲು ಸಹಕರಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ವಕೀಲ ಕೆ.ವಿ. ಸುನಿಲ್ ಅವರು ‘ಕಾರ್ಮಿಕರಿಗೆ ನ್ಯಾಯ’ ಎಂಬ ವಿಷಯದ ಬಗ್ಗೆ ಮಾತನಾಡಿ ಕಾರ್ಮಿಕರಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಕಾರ್ಮಿಕರಿಗೆ ಸರಿಯಾಗಿ ಅದರ ಸೌಲಭ್ಯಗಳು ದೊರಕುತ್ತಿಲ್ಲ. ವೀರಾಜಪೇಟೆ ಮತ್ತು ಮಡಿಕೇರಿಯಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಸಂಘಟನೆಯ ಮುಖಾಂತರ ಭೇಟಿಮಾಡಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು. ಕೆದಮುಳ್ಳೂರು ದವಸ ಭಂಡಾರದ ಅಧ್ಯಕ್ಷ ಮಾಳೇಟಿರ ಪ್ರಶಾಂತ್ ಉತ್ತಪ್ಪ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು. ದವಸ ಭಂಡಾರದ ಮಾಜಿ ಅಧ್ಯಕ್ಷ ಎಂ.ಎಂ. ಬೆಲ್ಲು ಬೋಪಯ್ಯ ಮಾತನಾಡಿದರು. ವೇದಿಕೆಯಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷೆ ಅನಿತಾ ಮುಂತಾದವರು ಉಪಸ್ಥಿತರಿದ್ದರು. ಎಂ.ಎಂ. ನಂಜಪ್ಪ ಸ್ವಾಗತಿಸಿ, ಪ್ರಶಾಂತ್ ಉತ್ತಪ್ಪ ವಂದಿಸಿದರು.