ಮಡಿಕೇರಿ, ಜು. 7 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ನಗರದ ಬಿ.ಆರ್.ಸಿ.ಕೇಂದ್ರ (ಕ್ಷೇತ್ರ ಸಂಪನ್ಮೂಲ ಕೇಂದ್ರ) ದಲ್ಲಿ ಶನಿವಾರ ನಡೆದ ಕೊಡಗು ಜಿಲ್ಲಾಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಎನ್.ಎಸ್.ರಾಜ್‍ನಂಜಪ್ಪ (ಪ್ರಥಮ ಸ್ಥಾನ), ಸೋಮವಾರಪೇಟೆ ಸೇಂಟ್ ಜೋಸೆಫರ ಪ್ರೌಢಶಾಲೆಯ ಎಂ.ಯು.ಶ್ರಾವಣಿ (ದ್ವಿತೀಯ ಸ್ಥಾನ) ಹಾಗೂ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಆಶಿನ್ ಕೃಷ್ಣ (ತೃತೀಯ ಸ್ಥಾನ) ಜಿಲ್ಲಾಮಟ್ಟದ ಯುವ ವಿಜ್ಞಾನಿಗಳಾಗಿ ಹೊರ ಹೊಮ್ಮಿದ್ದಾರೆ. ಯುವ ವಿಜ್ಞಾನಿ ಪ್ರಶಸ್ತಿ ಪಡೆದ ಮೂರು ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ. 5 ಸಾವಿರ, ರೂ. 3 ಸಾವಿರ ಮತ್ತು ರೂ. 2 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಜಿಲ್ಲಾಮಟ್ಟದಿಂದ ಆಯ್ಕೆಗೊಂಡಿರುವ ಈ ಯುವ ವಿಜ್ಞಾನಿಗಳು ತಾ. 28 ಮತ್ತು 29 ರಂದು ಬೆಂಗಳೂರಿನಲ್ಲಿ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವ ವಿಜ್ಞಾನಿ ಸಮಾವೇಶದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ.

ಯುವ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆಂಚಪ್ಪ, ವಿದ್ಯಾರ್ಥಿಗಳು ವಿಜ್ಞಾನಿಗಳ ಸಾಧನೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಂಡು ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸುವ ವ್ಶೆಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಮಹದೇವ್ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್ , ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆಯೊಂದಿಗೆ ವೈಚಾರಿಕತೆ ಬೆಳೆಸಲು ಸಹಕಾರಿಯಾಗಿವೆ ಎಂದರು.

ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ವಿಜ್ಞಾನ ವಿಷಯ ಪರಿವೀಕ್ಷಕ ದೇವನಾಯಕ್, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಬೆಳೆಸುವದರೊಂದಿಗೆ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಶಿವರಾಂ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸಹ ಕಾರ್ಯದರ್ಶಿ ಜಿ.ಶ್ರೀಹರ್ಷ, ಸಂಪನ್ಮೂಲ ವ್ಯಕ್ತಿ ಜಿ.ಶ್ರೀನಾಥ್, ಬಿಆರ್‍ಪಿ ಕೆ.ಯು.ರಂಜಿತ್, ಇಸಿಓಗಳಾದ ಚಂದ್ರಹಾಸ್, ಕೆ.ಬಿ.ರಾಧಾಕೃಷ್ಣ, ಸಿಬ್ಬಂದಿ ಕೆ.ಕೆ. ರೇವಣ್ಣ ಇದ್ದರು.

ಆಯ್ಕೆ ಪ್ರಕ್ರಿಯೆ: ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳಲ್ಲಿ ಪಡೆದ ಪ್ರಶಸ್ತಿ ಪತ್ರಗಳು ಮತ್ತು ವಿಜ್ಞಾನ ವಿಷಯದಲ್ಲಿ ವಿಶೇಷ ಸಾಧನೆಯೊಂದಿಗೆ ಲಿಖಿತ ಪರೀಕ್ಷೆ ಹಾಗೂ ವಿದ್ಯಾರ್ಥಿಗಳು ತಾವು ಸ್ವತಃ ಸಿದ್ಧಪಡಿಸಿ ಮಂಡಿಸಿದ ಯೋಜನಾ ವರದಿಯ ಮಂಡನೆಯಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಯುವ ವಿಜ್ಞಾನಿ ಪ್ರಶಸ್ತಿಯನ್ನು ನೀಡಲಾಯಿತು.