ಸೋಮವಾರಪೇಟೆ, ಜು. 30: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವದರಿಂದ ಜಿಲ್ಲೆಯ ಸ್ಥಳೀಯ ಸಂಸ್ಥೆ ಹಾಗೂ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವದು ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಬಿ.ಎ. ಜೀವಿಜಯ ಹೇಳಿದರು. ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದ ಜನತೆ ತಮಗೆ ರಾಜಕೀಯ ಶಕ್ತಿ ನೀಡಿಲ್ಲ, ಆದರೂ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವಿರುವದರಿಂದ ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವದು. ಕ್ಷೇತ್ರದಲ್ಲಿ ಹಲವಾರು ರಸ್ತೆ, (ಮೊದಲ ಪುಟದಿಂದ) ಸೇತುವೆ ಹಾಗೂ ಮೂಲಭೂತ ಸೌಕರ್ಯ ಗಳನ್ನು ಒದಗಿಸಬೇಕಾದ ಅನಿ ವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್‍ಪೂವಯ್ಯ ಅವರು ರಾಜೀನಾಮೆ ನೀಡಿರುವದು ಸಮಂಜಸವಲ್ಲ ಎಂದು ಜೀವಿಜಯ ಅಭಿಪ್ರಾಯಿಸಿದರು.

ಹೀಗಾಗಿ ಪಕ್ಷದ ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಘಟಕಗಳಿಗೂ ಪದಾಧಿಕಾರಿ ಗಳನ್ನು ನೇಮಕ ಮಾಡುವ ಕಾರ್ಯ ಆಗಬೇಕಿದೆ ಎಂದರು.

ಕುಶಾಲನಗರದ ಕಾವೇರಿ ನಿಸರ್ಗಧಾಮ ನಿರ್ವಹಣೆಗೆ ರೂ.2ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಣವನ್ನು ಸರಿಯಾಗಿ ವಿನಿಯೋಗಿಸದೆ ಅಧಿಕಾರಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳನ್ನು ಕರ್ತವ್ಯ ನಿರ್ವ ಹಿಸಲು ಬಿಡುವದಿಲ್ಲ. ಅಂತಹವರನ್ನು ಜಿಲ್ಲೆಯಿಂದಲೇ ಹೊರ ಕಳಿಸಲಾಗುವದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರ್ಯಕರ್ತರ ಅಭಿಪ್ರಾಯ ಪಡೆದು ಜೆಡಿಎಸ್ ವರಿಷ್ಠರಿಗೆ ಪಟ್ಟಿ ಸಲ್ಲಿಸಲಾಗುವದು ಎಂದು ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ವಿ.ನಾಗೇಶ್ ತಿಳಿಸಿದರು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವಾ, ಮುಖಂಡ ಸಂಜಯ್ ಜೀವಿಜಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಪಕ್ಷದ ಪ್ರಮುಖರಾದ ರಾಜಾರಾವ್, ಮನೋಜ್ ಬೋಪಯ್ಯ, ಸಿ.ಪಿ. ಪುಟ್ಟರಾಜು, ಎಚ್.ಬಿ. ಜಯಮ್ಮ, ಸಿ.ಎಲ್.ವಿಶ್ವ, ಪ್ರವೀಣ್, ಜಾನಕಿ ವೆಂಕಟೇಶ್, ಸಾಂತ್ವೇರಿ ವಸಂತ್, ಕೆ.ಸಿ.ನಾಣಯ್ಯ, ಮತ್ತಿತರರು ಉಪಸ್ಥಿತರಿದ್ದರು.