ಬೆಂಗಳೂರು, ಆ. 22: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರೊಂದಿಗೆ ಕೊಡಗಿನ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು. ಇದರನ್ವಯ ಕೊಡಗು ಜಿಲ್ಲೆಯಲ್ಲಿ ಈ ಕೆಳಗಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

* ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಬಿಸಿನೀರಿನ ವ್ಯವಸ್ಥೆ ಕಲ್ಪಿಸಲು ಗ್ಯಾಸ್ ಗೀಸರ್ ಹಾಗೂ ಅಡುಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ.

* ಪ್ರವಾಹ ಪೀಡಿತ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ತ್ವರಿತವಾಗಿ ವಿತರಣೆ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ 5 ದಾಸ್ತಾನು ಕೇಂದ್ರಗಳ ಮೂಲಕ 100 ಕ್ಕೂ ಹೆಚ್ಚು ವಾಹನಗಳಲ್ಲಿ ಗ್ರಾ.ಪಂ. ಹಾಗೂ ಇತರೆ ಪಟ್ಟಣ ಪ್ರದೇಶಗಳಿಗೆ ನಿರಂತರವಾಗಿ ತಲುಪಿಸಲಾಗುತ್ತಿದೆ.

* ನಿರಾಶ್ರಿತರಿಗೆ ಒದಗಿಸಲು ಹೆಚ್ಚುವರಿಯಾಗಿ ಟಾರ್ಪಲ್‍ಗಳು ಹಾಗೂ ಪ್ಲಾಸ್ಟಿಕ್ ಬ್ಯಾಗ್‍ಗಳು ಅಗತ್ಯವಿದ್ದು, ಉಳಿದಂತೆ ಇತರೆ ಎಲ್ಲಾ ಬಗೆಯ ಪರಿಹಾರ ಸಾಮಗ್ರಿಗಳು ದಾಸ್ತಾನು ಕೇಂದ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ.

* ಕೊಡಗು ಜಿಲ್ಲೆಯಲ್ಲಿ ಅಡುಗೆ ಅನಿಲ, ಗ್ಯಾಸ್ ಗೀಜರ್, ಪೆಟ್ರೋಲ್, ಡೀಸಲ್ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯ ಉಂಟಾಗದಂತೆ ನಿಗಾ ವಹಿಸುವಂತೆ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ಹಾಗೂ 50 ಸಾವಿರ ಆಹಾರ ಕಿಟ್‍ಗಳನ್ನು ಸಮರ್ಪಕವಾಗಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

* ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾಗಿರುವ ಪ್ರದೇಶಗಳ 61 ಶಾಲೆಗಳನ್ನು ಹೊರತುಪಡಿಸಿ ಉಳಿದೆಡೆ ಆಗಸ್ಟ್ 23 ರಿಂದಲೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

* ಐದು ಸಾವಿರ ಶಾಲಾ ಪುಸ್ತಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪರಿಹಾರ ಕೇಂದ್ರಗಳಲ್ಲಿ ಮಕ್ಕಳಿಗೆ ಶಾಲಾ ಪಠ್ಯ ಚಟುವಟಿಕೆ ಆರಂಭಿಸಲಾಗಿದೆ.

* ಜಿಲ್ಲೆಯಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ಎಂಜಿನಿಯರಿಂಗ್ ವಿಭಾಗ, ಈ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

* ಮುಂದಿನ ದಿನಗಳಲ್ಲಿ ಇನ್ನಷ್ಟು ಅನಾಹುತ ತಪ್ಪಿಸಲು ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಭೂ ಕುಸಿತ ತಡೆಯಲು ರಕ್ಷಣಾ ತಡೆಗೋಡೆ ನಿರ್ಮಿಸಲು ಮರಳು ಚೀಲಗಳನ್ನು ಬಳಸುವ ಮೂಲಕ ತಾತ್ಕಾಲಿಕ ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಬಂಧಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

* ಜಿಲ್ಲೆಯಾದ್ಯಂತ ಬಸ್ ಸಂಚಾರ ಹಾಗೂ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಕೆಎಸ್‍ಆರ್‍ಟಿಸಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

* ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪರಿಹಾರ ಕಾಮಗಾರಿಗಳನ್ನು ತಕ್ಷಣದಿಂದ ಪ್ರಾರಂಭಿಸಲು ಅಧಿಕಾರಿಗಳಗೆ ಸೂಚನೆ ನೀಡಲಾಗಿದೆ.

* ಬರುವ ದಿನಗಳಲ್ಲಿ ಪ್ರಕೃತಿ ವಿಕೋಪ ತಡೆಯುವ ನಿಟ್ಟಿನಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥಿತ ಚರಂಡಿ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

* ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಗೊಳ್ಳಲಾಗುವದು.

* ಪ್ರಕೃತಿ ವಿಕೋಪದಿಂದ ಉಂಟಾದ ಮನೆ ಹಾನಿ, ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟದ ಸಮೀಕ್ಷೆ ವರದಿ ಪಡೆದು ಸಂಬಂಧಪಟ್ಟವರಿಗೆ ಪರಿಹಾರ ಧನ ಪಾವತಿಸಲು ಕ್ರಮ ಕೈಗೊಳ್ಳಲಾಗುವದು.

* ಅತಿವೃಷ್ಟಿಯಿಂದಾಗಿ ಆಸ್ತಿ-ಪಾಸ್ತಿಯ ದಾಖಲೆಗಳನ್ನು ಕಳೆದುಕೊಂಡವರಿಗೆ ದಾಖಲೆಗಳನ್ನು ಸೃಷ್ಟಿಸಿಕೊಡುವ ಕಾರ್ಯ ಪ್ರಾರಂಭಿಸಲಾಗುವದು.

* ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಇವರ ಸಮನ್ವಯತೆಯಲ್ಲಿ ಅಗತ್ಯಕ್ಕನುಗುಣವಾಗಿ ಡ್ರೋಣ್ ಕ್ಯಾಮರಾಗಳನ್ನು ಬಳಸಿ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುವದು.