ಮಡಿಕೇರಿ, ಆ. 22: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ತೊಂದರೆ ಅನುಭವಿಸುತ್ತಿರುವ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿ ಸಿವೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಪ್ರಕೃತಿ ವಿಕೋಪದಿಂದ ರಸ್ತೆಗಳು ಹಾನಿಯಾ ಗಿದ್ದು, ಸದ್ಯ ಮಳೆ ಹಾನಿಯಿಂದ ತೊಂದರೆಯಾಗಿರುವ ಎರಡು ಜಿ.ಪಂ. ವ್ಯಾಪ್ತಿಯಲ್ಲಿ ತ್ವರಿತವಾಗಿ ಗ್ರಾಮೀಣ ರಸ್ತೆಗಳ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಿದೆ. ರಸ್ತೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ತಕ್ಷಣವೇ 50 ಲಕ್ಷ ರೂಪಾಯಿಯನ್ನು ಜಿ.ಪಂ. ಗೆ ನೀಡಲು ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕಾಮಗಾರಿಯನ್ನು ಕೈಗೊಳ್ಳಲು ತಕ್ಷಣವೇ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ 2500 ಕ್ವಿಂಟಾಲ್ ಅಕ್ಕಿ, 2 ಸಾವಿರ ಕೆ.ಜಿ. ಹಾಲಿನ ಪೌಡರ್, ಗ್ಯಾಸ್ ಗೀಜರ್ ಮತ್ತಿತರ ವಸ್ತುಗಳನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೊಡಗು ಮತ್ತು ಮಂಡ್ಯ ಜಿಲ್ಲೆಗೆ ಅವಿನಾಭಾವ ಸಂಬಂಧವಿದ್ದು, ಕೊಡಗು ಜಿಲ್ಲೆಯ ಜನರ ಸಂಕಷ್ಟವನ್ನು ನಿವಾರಿಸುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯ ಜನತೆ ಕೈಜೋಡಿಸಲಿದ್ದಾರೆ ಎಂದು ಹೇಳಿದರು.

ಶಾಸಕರಾದ ಕೆ.ಜಿ. ಬೋಪಯ್ಯ ಅವರು ಧಾರಾಕಾರ ಮಳೆಯಿಂದಾಗಿ ಸುಮಾರು 50 ರಿಂದ 60 ಗ್ರಾಮಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ, ಜೊತೆಗೆ ಮನೆಗಳಲ್ಲಿ ಕಳ್ಳತನವಾಗುತ್ತಿದೆ ಎಂದು ತಿಳಿಸಿದರು. ಜಿ.ಪಂ. ಮಾಜಿ ಅಧ್ಯಕ್ಷರಾದ ರವಿ ಕುಶಾಲಪ್ಪ ಅವರು ಕಳೆದ ವಾರ ಸುರಿದ ಧಾರಾಕಾರ ಮಳೆ ಯಿಂದ ಉಂಟಾದ ಪರಿಸ್ಥಿತಿಯನ್ನು ನೆನೆದು ಕಣ್ಣೀರು ಹಾಕಿದರು.