ನವದೆಹಲಿ, ಸೆ. 26: ಬಹು ನಿರೀಕ್ಷಿತ ಆಧಾರ್ ಸಿಂಧುತ್ವ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಆಧಾರ್ ಮೇಲಿನ ಧಾಳಿ, ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಹೇಳುವ ಮೂಲಕ ಆಧಾರ್ ಸಿಂಧುತ್ವವನ್ನು ಎತ್ತಿ ಹಿಡಿದಿದೆ.ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ಅಂತಿಮ ತೀರ್ಪಿನ ವಿವರವನ್ನು ನ್ಯಾಯಮೂರ್ತಿ ಎ.ಕೆ. ಸಿಕ್ರಿ ಓದಿದರು. 'ಆಧಾರ್ ಮೇಲಿನ ದಾಳಿ ಸಂವಿಧಾನಕ್ಕೆ ವಿರುದ್ಧವಾದುದು. ಆಧಾರ್ ದತ್ತಾಂಶಗಳ ಸೋರಿಕೆ ಅಥವಾ ಅವುಗಳನ್ನು ಕದಿಯುವದು ಸಂವಿಧಾನಕ್ಕೆ ವಿರುದ್ಧವಾದದ್ದು. ಆಧಾರ್ ಮಾಹಿತಿ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಅಂತೆಯೇ ಸಮಾಜದ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳು ಅಗತ್ಯ ಎಂದಿರುವ ಕೋರ್ಟ್, ಯೋಜನೆಗಳ ಫಲಾನುಭವಿಗಳಿಗೆ ಆಧಾರ್‍ನಿಂದ ಉಪಯೋಗ ವಾಗುತ್ತಿದೆ' ಎಂದು ಅಭಿಪ್ರಾಯ ಪಟ್ಟಿದೆ. ಆದ್ದರಿಂದ ಆಧಾರ್ ಮಾಹಿತಿಯನ್ನು ತಿರುಚಲು ಸಾಧ್ಯವಿಲ್ಲ ಎಂದು ಹೇಳಿರುವ ಕೋರ್ಟ್ ನಕಲಿ ಆಧಾರ್ ಕಾರ್ಡ್ ಸೃಷ್ಟಿಯೂ ಸಾಧ್ಯವಿಲ್ಲ. ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲು ಸಾಧ್ಯವಿದ್ದರೆ ಅದನ್ನು ತಡೆಗಟ್ಟಲು ಯತ್ನಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ

(ಮೊದಲ ಪುಟದಿಂದ) ಒಟ್ಟು 40 ಪುಟಗಳ ತೀರ್ಪಿನ ಸಾರಾಂಶವನ್ನು ನ್ಯಾ.ಸಿಕ್ರಿ ಓದಿದ್ದು, ‘ಖಾಸಗೀತನದ ಹಕ್ಕು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ’ ಎಂದು ಹೇಳಿದ್ದಾರೆ.

ಮೂವರು ಪರ, ಇಬ್ಬರು ವಿರೋಧ

ಇಂದಿನ ಪಂಚಸದಸ್ಯ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ ಎಕೆ ಸಿಕ್ರಿ, ನ್ಯಾ. ಎ.ಎಂ. ಖಾನ್ ವಿಲ್ಕರ್, ನ್ಯಾ.ಡಿ.ವೈ. ಚಂದ್ರಚೂಡ್, ನ್ಯಾ. ಅಶೋಕ್ ಭೂಷಣ್ ಅವರಿದ್ದರು. ಆಧಾರ್ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಐವರು ನ್ಯಾಯಮೂರ್ತಿಗಳಲ್ಲಿ ಮೂವರು ನ್ಯಾಯಮೂರ್ತಿಗಳು ಸಿಂಧುತ್ವವನ್ನು ಸ್ವಾಗತಿಸಿದ್ದರೆ, ಇನ್ನಿಬ್ಬರು ವಿರೋಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಕಳೆದ ಮಾರ್ಚ್ ತಿಂಗಳಿನಿಂದ ಆರಂಭಿಸಿತ್ತು. 12 ಅಂಕಿಗಳ ಆಧಾರ್ ಸಂಖ್ಯೆಯನ್ನು ಬಹುಮುಖ್ಯ ದಾಖಲೆಗಳೊಂದಿಗೆ ಜೋಡಿಸುವದರಿಂದ ಖಾಸಗಿ ಮಾಹಿತಿ ಸೋರಿಕೆಯಾಗುವ ಸಂಭವವಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು. ಖಾಸಗೀತನ ಮೂಲಭೂತ ಹಕ್ಕು ಎಂದು ಈಗಾಗಲೇ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿರುವದು ಆಧಾರ್ ಕಡ್ಡಾಯ ಕ್ರಮದಿಂದ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು.

ಆಧಾರ್ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಸೇರಿದಂತೆ 24 ಮಂದಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠವು ಸುದೀರ್ಘ ಅವಧಿಯವರೆಗೆ ವಿಚಾರಣೆ ನಡೆಸಿದ್ದು, ಮೇ ತಿಂಗಳಿನಲ್ಲಿ ತೀರ್ಪು ಕಾಯ್ದಿರಿಸಿತ್ತು.

ಈಗಿನ ತೀರ್ಪು ಪ್ರಕಾರ ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ, ಬ್ಯಾಂಕ್, ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯವಲ್ಲ,ಆಧಾರ್ ಕಾರ್ಡ್ ಇಲ್ಲ ಎಂದು ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸುವಂತಿಲ್ಲ

ಇನ್ನು ಶಿಕ್ಷಣ ಸಂಸ್ಥೆ, ಬ್ಯಾಂಕ್‍ಗಳಲ್ಲಿ ಆಧಾರ್ ಕಡ್ಡಾಯವಲ್ಲ ಎಂದು ಹೇಳಿರುವ ಕೋರ್ಟ್, ಸರ್ಕಾರದ ಯೋಜನೆಗಳಿಗೆ ಮಾತ್ರ ಆಧಾರ್ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. ಆಧಾರ್ ಕಾರ್ಡ್‍ನಲ್ಲಿರುವ ಮಾಹಿತಿ ತಿರುಚಲು ಸಾಧ್ಯವಿಲ್ಲ. ಆಧಾರ್ ಕಾರ್ಡ್ ನಕಲಿ ಮಾಡಲು ಸಾಧ್ಯವಿಲ್ಲ. ನಕಲಿ ಸೃಷ್ಟಿ ಮಾಡಲು ಅವಕಾಶ ಇದ್ದರೆ ಅದನ್ನು ತಡೆಗಟ್ಟಿ, ಆಧಾರ್‍ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಎಂದು ಕೋರ್ಟ್ ಆದೇಶಿಸಿದೆ.

ಇತ್ತ ಬ್ಯಾಂಕಿಂಗ್ ಸೇವೆಗಳಿಗೂ ಆಧಾರ್ ಕಡ್ಡಾಯವಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದ್ದು, ಆದರೆ ಪ್ಯಾನ್ ಕಾರ್ಡ್- ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಿದೆ. ಉಳಿದಂತೆ ಮೊಬೈಲ್ ಸೇವೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಕೋರ್ಟ್ ಹೇಳಿದ್ದು, ಪ್ರಮುಖ ಪರೀಕ್ಷೆಗಳಾದ ಸಿಬಿಎಸ್ ಇ, ನೀಟ್ ನಂತಹ ಪರೀಕ್ಷೆಗಳಲ್ಲಿ ಆಧಾರ್ ಕಡ್ಡಾಯಗೊಳಿಸಬಾರದು ಮಾತ್ರವಲ್ಲ ಹೊಸ ಬ್ಯಾಂಕ್ ಖಾತೆ ತೆರಯಲೂ ಕೂಡ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಕೇಳಬಾರದು ಎಂದು ಹೇಳಿದೆ.

ಅಂತೆಯೇ ಸರ್ಕಾರಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲ ಆಸ್ಪತ್ರೆಗಳಲ್ಲಿ ಆಧಾರ್ ಕಾರ್ಡ್ ಇಲ್ಲ ಎಂದು ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಮಾತ್ರವಲ್ಲದೆ ಆಧಾರ್ ಕಾಯ್ದೆಯ ಸೆಕ್ಷನ್ 57ನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಖಾಸಗಿ ಸಂಸ್ಥೆಗಳಿಗೆ ಅಥವಾ ಕಾರ್ಪೊರೇಟ್ ಸಂಸ್ಥೆಗಳಿಗೆ ಬಯೋಮೆಟ್ರಿಕ್ ಮಾಹಿತಿಯನ್ನು ನೀಡುವಂತಿಲ್ಲ. ಖಾಸಗಿ ಕಂಪನಿಗಳು ಆಧಾರ್ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.