ಸಿದ್ದಾಪುರ, ನ.19: ಅಮ್ಮತ್ತಿ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ನಲ್ಲಿಗಳನ್ನು ಕಡಿತಗೊಳಿಸಿರುವ ಗ್ರಾ.ಪಂ ಕ್ರಮವನ್ನು ಖಂಡಿಸಿ ಗ್ರಾಮಸ್ಥರು ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿದರು.
ಜನತಾ ಕಾಲೋನಿಯಲ್ಲಿ ಕಾರ್ಮಿಕರು ಸೇರಿದಂತೆ ಬಡ ಕುಟುಂಬಗಳು ವಾಸವಾಗಿದ್ದು, ಸಾರ್ವಜನಿಕ ಸಂಪರ್ಕದ ನೀರನ್ನು ಬಳಸುತ್ತಿದ್ದಾರೆ. ಆದರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕುಡಿಯುವ ನೀರಿನ ನಲ್ಲಿಗಳನ್ನು ಕಡಿತಗೊಳಿಸಿ, ಪ್ರತಿ ಮನೆಯಿಂದ ರೂ. 4500 ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನತಾ ಕಾಲೋನಿಯ ನಿವಾಸಿಗಳು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಳನ್ನು ಭೇಟಿ ಮಾಡಿ ಪಂಚಾಯಿತಿ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಿ ಪುಕಾರು ನೀಡಲಾಗಿತ್ತು. ಈ ಸಂದರ್ಭದಲ್ಲಿ ಜನತಾ ಕಾಲೋನಿಗೆ ಕುಡಿಯುವ ನೀರು ಒದಗಿಸಿ ಕೊಡುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ಪಿಡಿಓ ಬಳಿ ಗ್ರಾಮಸ್ಥರು ಮಾಹಿತಿ ಬಯಸಿದ ಸಂದರ್ಭ ಪಿ.ಡಿ.ಓ ಅವಾಚ್ಯ ಶಬ್ಧಗಳಿಂದ ನಿಂದಿಸಿ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿ ಪಿ.ಡಿ.ಓ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಗ್ರಾ.ಪಂ ಎದುರು ಜಮಾಯಿಸಿದರು.
ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಹಾಗೂ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನಿಸಿದರು.
ಪ್ರತಿಭಟನಾ ನಿರತರೊಂದಿಗೆ ಮಾತನಾಡಲು ಮುಂದಾದ ಅಭಿವೃದ್ಧಿ ಅಧಿಕಾರಿ ರವಿ ತಮ್ಮಯ್ಯ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ ಮಧ್ಯ ಪ್ರವೇಶಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷೆ ರೋನ ಭೀಮಯ್ಯ ಪ್ರತಿಭಟನಾಕಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ “ಬಾಯಿ ಮುಚ್ಚಿ ಇರು”ವಂತೆ ಧಮ್ಕಿ ಹಾಕಿದ ಪ್ರಸಂಗವೂ ನಡೆಯಿತು. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬರುವಂತೆ ಪಟ್ಟು ಹಿಡಿದರು.
ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾ ಪಂಚಾಯತಿ ಸದಸ್ಯ ಮುಕೊಂಡ ಶಶಿ ಸುಬ್ರಮಣಿ ಪ್ರತಿಭಟನಾಕಾರರೊಂದಿಗೆ ಚಿರ್ಚಿಸಿ ಮಾಹಿತಿ ಪಡೆದುಕೊಂಡರು. ಸಮಸ್ಯೆಗಳಿಗೆ ಸ್ಪಂದಿಸುವದಾಗಿ ತಿಳಿಸಿದ ಅವರು, ಗ್ರಾಮ ಪಂಚಾಯಿತಿಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವದು ಹಾಗೂ ಮುಂದಿನ ಒಂದು ತಿಂಗಳೊಳಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆ ಹರಿಸುವದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಲಿಜೇಶ್, ಕುಟ್ಟಂಡ ಕೃಷ್ಣ, ರವಿ, ನಾಸರ್, ಬೋಪಣ್ಣ, ಅಭಿಜಿತ್, ಆಂಟೊನಿ ತಾ.ಪಂ ಮಾಜಿ ಸದಸ್ಯ ಜಾನ್ಸನ್ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.