ಸುಂಟಿಕೊಪ್ಪ, ನ. 22: ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಾದ ಬೀಡಿ, ಸೀಗರೇಟು, ಗುಟ್ಕಾ, ಅಫೀಮು, ಗಾಂಜಾದಂತಹ ದುಶ್ಚಟ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಎಂ.ಎನ್. ಲತಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲೆಯ ವಿಜ್ಞಾನ ಸಂಘ ಮತ್ತು ಇಕೋ ಕ್ಲಬ್ ಸಹಯೋಗದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಾಗೃತಿ ಆಂದೋಲನ ಮತ್ತು ತರಬೇತಿ ಕಾರ್ಯಾಗಾರದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಪೋಷಕರು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದರು.

‘ಜೀವನ ಆಯ್ದುಕೊಳ್ಳಿ-ತಂಬಾಕನ್ನಲ’್ಲ ಎಂಬ ಧ್ಯೇಯ ವಾಕ್ಯದ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಇಕೋ ಕ್ಲಬ್‍ನ ಉಸ್ತುವಾರಿ ಶಿಕ್ಷಕ ಟಿ.ಜಿ. ಪ್ರೇಮ ಕುಮಾರ್, ತಂಬಾಕು ಸೇವನೆಯಿಂದ ದೂರವಿದ್ದು ಉತ್ತಮ ಆರೋಗ್ಯ ಮತ್ತು ಭವಿಷ್ಯ ಕಾಪಾಡಿಕೊಳ್ಳಬೇಕು ಎಂದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಖಾಯಿಲೆಗಳ ಕುರಿತು ಸ್ಲೈಡ್ ಶೋ ಮೂಲಕ ಮಾಹಿತಿ ನೀಡಿದ ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಆರ್. ಮಂಜುನಾಥ್, ತಂಬಾಕಿ ನಲ್ಲಿರುವ 4000 ರಾಸಾಯನಿಕಗಳು ಅನೇಕ ರೋಗಗಳಿಗೆ ಕಾರಣವಾಗಬಹುದು. ಇದರಿಂದ ಜೀವಕ್ಕೆ ಅಪಾಯವಿದೆ ಎಂದರು.

ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಮಾಹಿತಿ ನೀಡಿದ ಆರೋಗ್ಯ ಇಲಾಖೆಯ ಜಿಲ್ಲಾ ಸಲಹೆಗಾರರಾದ ಎಸ್. ಪುನೀತಾ ರಾಣಿ, ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂದ ಹೆಚ್ಚು ಮಂದಿ ತಂಬಾಕು ಸೇವನೆಯಿಂದ ಉಂಟಾಗುವ ಖಾಯಿಲೆಗಳಿಗೆ ತುತ್ತಾಗುತ್ತಿರುವದು ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ದಿಸೆಯಲ್ಲಿ ತಂಬಾಕು ಸೇವನೆ ನಿಯಂತ್ರಣಕ್ಕೆ ತಂಬಾಕು ನಿಯಂತ್ರಣ ಮಂಡಳಿ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿ.ಎ.ಗೀತಾ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಎಸ್.ಕೆ. ಸೌಭಾಗ್ಯ, ಶಿಕ್ಷಕರಾದ ಎಸ್.ಆರ್. ಚಿತ್ರಾ, ಎಂ.ಆರ್. ಸುನಂದ, ಶಾಂತಾ ಹೆಗಡೆ, ಪಿ.ಇ. ನಂದ ಇತರರು ಇದ್ದರು.

ನಂತರ ನಡೆದ ಸಂವಾದದಲ್ಲಿ ಪ್ರೌಢಶಾಲಾ ವಿದ್ಯಾರ್ಥಿ ಸಂಘದ ನಾಯಕ ಸಿ.ವಿ. ಆದಿತ್ಯ, ವಿದ್ಯಾರ್ಥಿ ಮಣಿಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

ನಂತರ ನಡೆದ ಜಾಗೃತಿ ಆಂದೋಲನದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತ ಕರಪತ್ರಗಳನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.