ಸೋಮವಾರಪೇಟೆ, ಜ. 2: ಸೋಮವಾರಪೇಟೆ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಪಟ್ಟಣದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್, ಎಎಸ್‍ಐ ಪುಟ್ಟಪ್ಪ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ತೆರಳಿದ ವಿದ್ಯಾರ್ಥಿಗಳು ಅಪರಾಧ ತಡೆಯಲು ಸುರಕ್ಷಾ ಸಲಹೆಗಳ ಕರಪತ್ರಗಳನ್ನು ಹಂಚಿದರು. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜು, ಸಾಂದೀಪನಿ, ಜ್ಞಾನವಿಕಾಸ ಶಾಲೆಯ ವಿದ್ಯಾರ್ಥಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.