ಮಡಿಕೇರಿ, ಜ. 1: ಜಿ.ಪಂ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲ್ಲೂಕುಗಳ ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ತಾ. 20 ರಂದು ಕೊಡಗು ಜಿಲ್ಲಾ ಯುವಜನ ಮೇಳ ನಡೆಯಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರು ಹೆಸರು ನೋಂದಾಯಿಸಿಕೊಳ್ಳುವಂತೆ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ. ಸುಕುಮಾರ್ ಮನವಿ ಮಾಡಿದ್ದಾರೆ.

ಗಾಳಿಬೀಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಜನ ಮೇಳವನ್ನು ಆಯೋಜಿಸಲಾಗಿದ್ದು, ಸ್ಪರ್ಧಾ ಕಾರ್ಯಕ್ರಮದಲ್ಲಿ ವೈಯುಕ್ತಿಕವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಸ್ಪರ್ಧಾ ಕಾರ್ಯಕ್ರಮದಲ್ಲಿ ಯುವಕ, ಯುವತಿಯರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಭಾವಗೀತೆ, ಗೀಗಿಪದ, ಲಾವಣಿ, ಕೋಲಾಟ, ರಂಗಗೀತೆ, ಜಾನಪದ ನೃತ್ಯ, ಜಾನಪದ ಗೀತೆ, ರಾಗಿ, ಜೋಳ ಬಿಸುವ ಒನಕೆ ಪದ, ಸೋಬಾನೆ, ಭಜನೆ, ಏಕಪಾತ್ರಭಿನಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಯುವಕ, ಯುವತಿ ಮಂಡಳಿಯ ಸದಸ್ಯರು ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿರುವ ಪಿ.ಪಿ. ಸುಕುಮಾರ್ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವದು ಎಂದು ತಿಳಿಸಿದ್ದಾರೆ. ಸ್ಪರ್ಧಿಗಳು ತಾ.. 20 ರಂದು ಬೆಳಿಗ್ಗೆ 10 ಗಂಟೆಯೊಳಗೆ ಸ್ಥಳದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ 9481213920, 9449759029ನ್ನು ಸಂಪರ್ಕಿಸಬಹುದಾಗಿದೆ.