ಮಡಿಕೇರಿ, ಜ.14 : ವಿವಿಧ ಇಲಾಖೆಗಳಿಂದ ನಡೆಯುವ ಕಾರ್ಯಕ್ರಮಗಳ ಸಂದರ್ಭದಲ್ಲಿ ಎಚ್‍ಐವಿ ಏಡ್ಸ್ ಬಗ್ಗೆ ಅರಿವು ಮೂಡಿಸುವಂತಾಗಬೇಕು ಎಂದು ಪ್ರಬಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸಲಹೆಯಿತ್ತರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್‍ಐವಿ ಏಡ್ಸ್ ನಿಯಂತ್ರಣ ಬಗ್ಗೆ ವಿವಿಧ ಇಲಾಖೆಗಳಿಂದ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಚ್‍ಐವಿ ಏಡ್ಸ್ ಬರುವದಕ್ಕೂ ಮೊದಲು ಮುನ್ನೆಚ್ಚರಿಕೆ ವಹಿಸುವದು ಅಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಮಾಹಿತಿ ಇರಬೇಕು ಎಂದರು.ಎಚ್‍ಐವಿ ಏಡ್ಸ್ ನಿಯಂತ್ರಣ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಮಾಹಿತಿ ನೀಡುವದು, ಸಾಕ್ಷ್ಯಚಿತ್ರದ ಮೂಲಕ ಜಾಗೃತಿ ಮೂಡಿಸುವದು, ಹೀಗೆ ಹಲವು ಕಾರ್ಯಕ್ರಮಗಳನ್ನು ಪ್ರತೀ ತಿಂಗಳು ಹಮ್ಮಿಕೊಳ್ಳಬೇಕೆಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು ಎಚ್‍ಐವಿ ಏಡ್ಸ್ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಸಹ ಕೈಜೋಡಿಸು ವಂತಾಗಬೇಕು. ಹಾಗೆಯೇ ಎಚ್‍ಐವಿ ಏಡ್ಸ್ ಪೀಡಿತರಿಗೆ ವಿವಿಧ ಇಲಾಖೆ ಗಳಿಂದ ಒದಗಿಸಲಾಗುವ ಸೌಲಭ್ಯ ಗಳು ಸಕಾಲದಲ್ಲಿ ದೊರೆಯುವಂತಾ ಗಬೇಕು ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್ ಅವರು ಜಿಲ್ಲೆಯಲ್ಲಿ ಏಪ್ರಿಲ್‍ನಿಂದ ಡಿಸೆಂಬರ್ ಅಂತ್ಯದವರೆಗೆ 115 ಪೋಸಿಟಿವ್ ಪ್ರಕರಣಗಳು ಕಂಡುಬಂದಿದೆ ಎಂದು ಮಾಹಿತಿ ನೀಡಿದರು. ಎಚ್.ಐ.ವಿ.ಏಡ್ಸ್ ನಿಯಂತ್ರಣ ಸಂಬಂಧಿಸಿದಂತೆ ರೇಡಿಯೋ ಕಾರ್ಯಕ್ರಮ, ಗೋಡೆ ಬರಹ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಆನಂದ್, ಜಿಲ್ಲಾಸ್ಪತ್ರೆಯ ಡಾ.ಮಂಜುನಾಥ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಎಸ್.ಸದಾಶಿವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ರಾಧ, ಕಾರ್ಯಕ್ರಮ ಅಧಿಕಾರಿ ಮಮ್ತಾಜ್, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟಿ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ಐಟಿಡಿಪಿ ಇಲಾಖೆಯ ರಂಗನಾಥ್ ಇತರರು ತಮ್ಮ ಇಲಾಖೆ ವ್ಯಾಪ್ತಿಯ ಮಾಹಿತಿ ನೀಡಿದರು.