ಕುಶಾಲನಗರ, ಫೆ. 7: ಕುಶಾಲನಗರ ಪಪಂಗೆ ಒಳಪಟ್ಟ ಹಳೆಯ ವಾಣಿಜ್ಯ ಮಳಿಗೆಗಳ ಕಟ್ಟಡದ ಗುಣಮಟ್ಟ ಪರಿಶೀಲನೆಗೆ ವಿಶೇಷ ತಜ್ಞರ ತಂಡ ಕುಶಾಲನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪಟ್ಟಣದ ಹೃದಯ ಭಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣ ಹಿನ್ನೆಲೆಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವ ಸಂದರ್ಭ ಕೆಲವು ಮಳಿಗೆದಾರರು ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನೀಡಿದ ನಿರ್ದೇಶನದ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಲು ಕ್ರಮ ಕೈಗೊಂಡರು.

ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಕಾಂತರಾಜು ಅವರ ನೇತೃತ್ವದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಕಟ್ಟಡಗಳು ವಾಸಕ್ಕೆ ಯೋಗ್ಯವಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ಕೈಗೊಂಡರು. ಕಟ್ಟಡದ ಗುಣಮಟ್ಟದ ವಾಸ್ತವ ಅಂಶದ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆ ಗುಣಮಟ್ಟ ಪರಿಶೀಲನಾ ವಿಭಾಗದ ಮತ್ತು ಜಿಲ್ಲಾ ಅಧಿಕಾರಿಗಳ ತಂಡದಲ್ಲಿ ನರೇಂದ್ರಬಾನು, ಶಿವಕುಮಾರ್, ಸೈಜಿನ್ ಇದ್ದರು.

ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಜಯ್‍ಕುಮಾರ್, ಅಭಿಯಂತರೆ ಶ್ರೀದೇವಿ ಅವರು ತಂಡದೊಂದಿಗೆ ಇದ್ದರು.