ಮಡಿಕೇರಿ, ಫೆ.13 : ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾ. 16 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವದು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಚೇತನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಶಿಕ್ಷಕರ ಬೇಡಿಕೆಗಳನ್ನು ಮುಂದಿಟ್ಟು ತಾ.16 ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಸಾಮೂಹಿಕ ಸಾಂದರ್ಭಿಕ ರಜೆ ಹಾಕುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಡಿಕೇರಿ ಉಪ ನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ 1500 ಕ್ಕೂ ಹೆಚ್ಚಿನ ಶಿಕ್ಷಕರು ಬೃಹತ್ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಹಾಗೂ ಶಾಲೆಯ ದೈನಂದಿನ ಚಟುವಟಿಕೆÀಗಳಿಗೆ ಅಡ್ಡಿಯಾಗದಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಟ ಒಬ್ಬ ಶಿಕ್ಷಕರು ಇರುವಂತೆ ನೋಡಿಕೊಂಡು ಶಿಕ್ಷಕರು ಸಾಂದರ್ಭಿಕ ರಜೆ ಸಲ್ಲಿಸಲಿದ್ದಾರೆಂದು ಸ್ಪಷ್ಟಪಡಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವಾರು ವರ್ಷಗಳಿಂದ ಸರ್ಕಾರಕ್ಕೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದಿದ್ದರು ಎಲ್ಲಾ ಸರ್ಕಾರಗಳು ಅವುಗಳನ್ನು ನಿರ್ಲಕ್ಷಿಸುತ್ತಲೆ ಬಂದಿವೆ. ಈ ಹಿನ್ನೆಲೆಯಲ್ಲಿ ಇದೀಗ ಅನಿವಾರ್ಯವಾಗಿ ಶಿಕ್ಷಕರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿಯಲೇ ಬೇಕಾಗಿದೆ ಎಂದರು.

ವರ್ಗಾವಣೆ ನೀತಿ ಜಾರಿಯಾಗಿದ್ದರೂ ಕಳೆÉದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಮಾಡದೆ ಸರ್ಕಾರ ಶಿಕ್ಷಕರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ ಅವರು, ಈಗಾಗಲೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರು ಕಳೆದ ಮೂರು ವರ್ಷಗಳಿಂದ ನಿರಾಸೆಯಿಂದ ಕಾರ್ಯ ನಿರ್ವಹಿಸುವಂತಾಗಿದೆ ಎಂದು ದೂರಿದರು.

ಪದವೀಧರರು ಹಾಗೂ ಇತರ ಶಿಕ್ಷಕರ ಬಡ್ತಿ ಪ್ರಕ್ರಿಯೆಯು ಸ್ಥಗಿತಗೊಂಡಿದ್ದು, ನೂತನ ಪಿಂಚಣಿ ಯೋಜನೆಯಿಂದಾಗಿ ಶಿಕ್ಷಕರು ನಿವೃತ್ತಿ ಬಳಿಕ ಬರಿಗೈಯಲ್ಲಿ ಮನೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಯೋಜನೆಯನ್ನು ಜಾರಿಗೊಳಿಸಬೇಕು. ಮುಖ್ಯೋಪಾಧ್ಯಾಯರು, ಬಡ್ತಿ ಹೊಂದುವವರಿಗೆ 10, 15, 20 ವರ್ಷಗಳ ಆರ್ಥಿಕ ಸೌಲಭ್ಯವನ್ನು ಒದಗಿಸಬೇಕು. ಸೇವಾ ಜೇಷ್ಠತೆಯನ್ನು ಪರಿಗಣಿಸುವ ಮೂಲಕ ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಬೇಕು, ಶಿಕ್ಷಕರ ವೇತನ ಆಯೋಗದಲ್ಲಿ 1998 ಮತ್ತು 2003ರಲ್ಲಿ ನೇಮಕಗೊಂಡ ಶಿಕ್ಷಕರಿಗೆ ತಾರತಮ್ಯವಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಪದೋನ್ನತಿ ಪ್ರಕ್ರಿಯೆಯನ್ನು ಮರಳಿ ಆರಂಭಿಸುವಂತೆ ಪ್ರತಿಭಟನೆಯ ಸಂದರ್ಭ ಒತ್ತಾಯಿಸ ಲಾಗುವದೆಂದರು.

ಶಿಕ್ಷಕರ ಈ ಪ್ರತಿಭಟನೆಗೂ ಸ್ಪಂದನೆ ದೊರೆಯದಿದ್ದಲ್ಲಿ ಈ ತಿಂಗಳ ಕೊನೆ ಇಲ್ಲವೆ ಮಾರ್ಚ್ ಮೊದಲ ವಾರದಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವದಲ್ಲದೆ, ಸುಮಾರು 1 ಲಕ್ಷಕ್ಕೂ ಹೆಚ್ಚಿನ ಪ್ರಾಥಮಿಕ ಶಾಲಾ ಶಿಕ್ಷಕರು ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲಿದ್ದಾರೆಂದು ಸ್ಪಷ್ಟಪಡಿಸಿದರು.

ಸಂಘದ ವೀರಾಜಪೇಟೆ ತಾಲೂಕು ಅಧ್ಯಕ್ಷ ಸುರೇಂದ್ರ, ಸೋಮವಾರಪೇಟೆ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಬಸವರಾಜು ಮತ್ತು ಮಡಿಕೆÉೀರಿ ತಾಲೂಕು ಕಾರ್ಯದರ್ಶಿ ಮತ್ತು ರಾಜ್ಯ ಕಾರ್ಯದರ್ಶಿಯೂ ಆಗಿರುವ ಪುದಿಯನೆರವನ ರೇವತಿ ರಮೇಶ್ ಅವರುಗಳು ಮಾತನಾಡಿ, ಆಯಾ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆಯ ದಿನದಂದು ಸಾಂದರ್ಭಿಕ ರಜೆಯನ್ನು ಸಲ್ಲಿಸುವ ಮೂಲಕ ಜಿಲ್ಲಾ ಕೇಂದ್ರದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವÀಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ರೇಖಾ ಕುಮಾರಿ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎ.ವಿ. ಮಂಜುನಾಥ್ ಉಪಸ್ಥಿತರಿದ್ದರು.