ಮಡಿಕೇರಿ, ಫೆ. 21: ಸಮಾಜದಲ್ಲಿ ಸಮಾನವಾಗಿ ಬದುಕು ಕಟ್ಟಿಕೊಳ್ಳಲು ಲಿಂಗಾನುಪಾತದಲ್ಲಿ ಸಮತೋಲನ ಇರಬೇಕು. ಆದ್ದರಿಂದ ಹೆಣ್ಣು ಮತ್ತು ಗಂಡಿಗೆ ಸಮಾನ ಅವಕಾಶಗಳು ದೊರೆಯಬೇಕು ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ಥಳೀಯ ಜನಪ್ರತಿ ನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕರ್ತರಿಗೆ ನಗರದ ಹೊಟೇಲ್ ವ್ಯಾಲಿ ವ್ಯೂನಲ್ಲಿ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ನಡೆದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸವ ಪೂರ್ವ ಲಿಂಗಪತ್ತೆ ಹಚ್ಚುವದು ಅಪರಾಧವಾಗಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದರು.

ವಕೀಲ ಎಂ.ಎ. ನಿರಂಜನ್ ಮಾತನಾಡಿ, ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಇನ್ನೂ ಸಮರ್ಪಕವಾಗಿ ಅನುಷ್ಠಾನಗೊಳ್ಳುವಂತಾಗಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಮಾತನಾಡಿ ನಗರ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ನಗರ ಮತ್ತು ಪಟ್ಟಣ ಪ್ರದೇಶದ ಜನರಿಗೆ ಆರೋಗ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಮಾತನಾಡಿ, ಪ್ರಸವ ಪೂರ್ವ ಭ್ರೂಣ ಲಿಂಗಪತ್ತೆಯನ್ನು ಅನುವಂಶೀಯ ಕಾಯಿಲೆಗಳನ್ನು ಪತ್ತೆಹಚ್ಚಲು ಆರಂಭಿಸಲಾಯಿತು. ಆದರೆ ಇದು ದುರುಪಯೋಗ ವಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಕಾಯ್ದೆ ಜಾರಿಗೊಳಿಸ ಲಾಯಿತು ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ.ಸಿ. ದಯಾನಂದ ಮಾತನಾಡಿ, ಗಂಡು ಮತ್ತು ಹೆಣ್ಣು ಲಿಂಗಾನುಪಾತದಲ್ಲಿ ಅಸಮತೋಲನ ಉಂಟಾದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಪೌರಾಯುಕ್ತ ಎಂ.ಎಲ್. ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಪತ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ವ್ಯವಸ್ಥಾಪಕ ದೇವರಾಜು ಇತರರು ಇದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಿರಣ್ ಸ್ವಾಗತಿಸಿದರು. ಕಮಲಮ್ಮ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ನಿರೂಪಿಸಿ, ವಂದಿಸಿದರು.