ಮಡಿಕೇರಿ, ಫೆ. 21: ಸಾಮಾಜಿಕ ನ್ಯಾಯವು ಪ್ರಸ್ತುತ ಕಾಲಘಟ್ಟದಲ್ಲಿ ಸಮಾನತೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವಿ.ವಿ. ಮಲ್ಲಾಪುರ ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆದ ‘ಅಂತರ್ರಾಷ್ಟ್ರೀಯ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಾನವ ಹಕ್ಕುಗಳ’ ಬಗ್ಗೆ ಕಾನೂನು ಅರಿವು ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ಇದ್ದಾಗ, ತಪ್ಪು ಮಾಡುವದು ಕಡಿಮೆಯಾಗುತ್ತದೆ. ಆದ್ದರಿಂದ ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ಜ್ಞಾನ ಹೊಂದಿರಬೇಕು ಎಂದರು.

ವಕೀಲ ಎಂ.ಎ. ನಿರಂಜನ್ ಮಾತನಾಡಿ ದೇಶದ ಭವಿಷ್ಯಕ್ಕೆ ಸಾಮಾಜಿಕ ನ್ಯಾಯದ ಭದ್ರತೆಯ ಹರಿಕಾರರಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ವಿದ್ಯಾರ್ಥಿಗಳು ದೂರವಿರಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಸಾಮಾಜಿಕ ನ್ಯಾಯ ಪ್ರಮುಖವಾಗಿದೆ. ಭಾರತೀಯ ಪ್ರಜೆಗಳ ಮೂಲಭೂತ ಕರ್ತವ್ಯಗಳು ಕಾನೂನು ಚೌಕಟ್ಟಿನೊಳಗಿದ್ದು ವಿಧೇಯರಾಗಿರ ಬೇಕು ಎಂದರು.

ವಕೀಲರ ಸಂಘದ ಉಪಾಧ್ಯಕ್ಷ ಪಿ.ಯು. ಪ್ರೀತಂ ಮಾತನಾಡಿ, ಪ್ರಸ್ತುತ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯವಿದೆ. ಭಾರತದ ಪ್ರಜೆಗಳು ಸಾಮಾಜಿಕ ನ್ಯಾಯದಿಂದ ಶಾಂತಿ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಒಲವು ತೋರಿಸಬೇಕಾಗುತ್ತದೆ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜೆನ್ನಿಫರ್ ಲೋಲಿಟಾ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗದ ಅಧ್ಯಾಪಕರು, ಉಪನ್ಯಾಸಕರು ಉಪಸ್ಥಿತರಿದ್ದರು, ನಿಕಿತಾ ಸ್ವಾಗತಿಸಿದರು, ಅರ್ಪಿತಾ ವಂದಿಸಿದರು.