ಗೋಣಿಕೊಪ್ಪಲು, ಮಾ. 5: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪ್ರೊ. ಇಟ್ಟೀರ ಕೆ. ಬಿದ್ದಪ್ಪ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಿಂದ ಬಂದವರು ಇಂದು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುತ್ತಿರುವದು ಒಳ್ಳೆಯ ಬೆಳವಣಿಗೆಯಾಗಿದೆ. ಇಂದಿನ ವಿದ್ಯಾರ್ಥಿಗಳು ಸಿ.ವಿ. ರಾಮನ್ರಂತಹ ಮಹಾನ್ ವಿಜ್ಞಾನಿಗಳನ್ನು ಆದರ್ಶವಾಗಿಟ್ಟುಕೊಂಡು ದೇಶದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಮುಂದುವರೆಯಬೇಕು. ವಿಜ್ಞಾನದ ಹೆಸರಿನಲ್ಲಿ ಬೇಕಾಬಿಟ್ಟಿ ಪರಿಸರ ನಾಶ ಮಾಡದೆ ಮುಂದಿನ ಮನುಕುಲಕ್ಕೆ ಸುಂದರ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಜೆ.ಜಿ. ಮಂಜುನಾಥ ‘ಇಟeಛಿಣಡಿoಛಿhemiಛಿಚಿಟ seಟಿsoಡಿs ಜಿoಡಿ ಣhe ಆeಣeಡಿmiಟಿಚಿಣioಟಿ ಔಜಿ ಃioಚಿಛಿಣive ಒoಟeಛಿuಟes’ ಎಂಬ ವಿಷಯದ ಬಗ್ಗೆ ಮಾತನಾಡಿದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮಾನವನು ಪರಿಸರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ಅದರಿಂದಾಗುವ ದುಷ್ಪರಿಣಾಮಗಳನ್ನು ನೃತ್ಯ ಪ್ರದರ್ಶನದ ಮೂಲಕ ತೋರಿಸಿ ಅರಿವು ಮೂಡಿಸಿದರು. ಈ ಸಂದರ್ಭ ಉಪ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ, ಹಿರಿಯ ಪ್ರಾಧ್ಯಾಪಕಿ ಪ್ರೊ. ಕೆ.ಎಸ್.ತುಳಸಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೆ.ವಿ. ಕುಸುಮಾಧರ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ.ಬಿ. ನರೇಶ್, ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥೆ ಸಿ.ಎಲ್. ನಿಶಾ, ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಕೃತಿಕ ಇನ್ನಿತರರು ಉಪಸ್ಥಿತರಿದ್ದರು.