ಮಡಿಕೇರಿ, ಮಾ. 10: ಮತದಾನದ ಮಹತ್ವ ಕುರಿತು ಜಿಲ್ಲೆಯ ಹಲವು ಕಡೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದೆ. ಹಲವು ಸಂಘ-ಸಂಸ್ಥೆಗಳ ಜೊತೆಗೂಡಿ ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಬಂಧ ಪ್ರತಿಜ್ಞಾ ವಿಧಿ ಸ್ವೀಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈಗಾಗಲೇ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವದು, ಸಂಘ ಸಂಸ್ಥೆಗಳ ಜೊತೆಗೂಡಿ ಮತದಾನದ ಮಹತ್ವ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ.

ಪ್ರತಿಜ್ಞಾ ವಿಧಿ ಸಂದರ್ಭದಲ್ಲಿ ‘ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಬೋಧಿಸಲಾಗುತ್ತದೆ.

ಜೊತೆಗೆ ಮತದಾನ ಜಾಗೃತಿ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಪ್ರಮುಖವಾಗಿ ಕಂಟ್ರೋಲ್ ಯೂನಿಟ್, ಬ್ಯಾಲೇಟ್ ಯೂನಿಟ್ ಹಾಗೆಯೇ ವಿವಿ ಪ್ಯಾಟ್ ಪ್ರಮುಖವಾಗಿದ್ದು, ಬ್ಯಾಲೆಟ್ ಯೂನಿಟ್‍ನಲ್ಲಿ ಮತದಾನ ಮಾಡಿದ ನಂತರ ಕಂಟ್ರೋಲ್ ಯೂನಿಟ್‍ನಲ್ಲಿ ಭದ್ರವಾಗಲಿದೆ. ಯಾರಿಗೆ ಮತದಾನ ಮಾಡಲಾಗಿದೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ವಿವಿಪ್ಯಾಟ್ ಸಹಕಾರಿಯಾಗಿದೆ. ಹೀಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ.

ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ 18 ವರ್ಷ ಪೂರ್ಣಗೊಂಡವರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತಾಗಬೇಕು. ಇಡೀ ವಿಶ್ವದಲ್ಲಿಯೇ ಮಾದರಿ ಸಂವಿಧಾನ ಹೊಂದಿರುವ ಅರ್ಹರೆಲ್ಲರೂ ಚುನಾವಣಾ ಗುರುತಿನ ಚೀಟಿ ಪಡೆದು ಮತದಾನ ಮಾಡುವಂತಾಗಬೇಕು ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಅಧ್ಯಕ್ಷೆ ಕೆ. ಲಕ್ಷ್ಮಿಪ್ರಿಯಾ ಕರೆ ನೀಡಿದರು.

ಮುಂದಿನ ದಿನಗಳಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಜಾಥಾ ಕಾರ್ಯಕ್ರಮಗಳು, ಬೀದಿನಾಟಕ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವದು ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.