ಸೋಮವಾರಪೇಟೆ, ಮಾ. 14: ಜಿಲ್ಲಾ ಜೆಡಿಎಸ್ಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿದ ರಾಜ್ಯಾಧ್ಯಕ್ಷರ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದೀಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ತಮ್ಮ ಹಕ್ಕೊತ್ತಾಯ ಮಂಡಿಸಲು ನಿರ್ಧರಿಸಿದ್ದಾರೆ. ಜತೆಗೆ ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷರ ನೇಮಕ ನಂತರ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿರುವ ಜೆಡಿಎಸ್ ಮುಖಂಡ ಹಾಗೂ ಮಾಜೀ ಸಚಿವ ಬಿ.ಎ. ಜೀವಿಜಯ ಮತ್ತು ಬೆಂಬಲಿಗರು ಇಂದು ಬಿಳಿಗೇರಿ ಗ್ರಾಮದ ಜೀವಿಜಯ ಅವರ ಮನೆಯಲ್ಲಿ ಸಭೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಗಂಭೀರವಾಗಿ ಚರ್ಚಿಸಿದರು.
ಈಗಾಗಲೇ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎಂ.ಬಿ. ಗಣೇಶ್ ಅವರನ್ನು ಬದಲಾವಣೆಗೊಳಿ ಸುವಂತೆ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಒತ್ತಡ ಹೇರುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ತಮ್ಮ ಬೇಡಿಕೆಗೆ ಮನ್ನಣೆ ಸಿಗದಿದ್ದರೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡುವಂತೆಯೂ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಗೊಂಡಿದೆ.
ಕೆ.ಎಂ.ಬಿ.ಗಣೇಶ್ ಅವರನ್ನು ಜೆಡಿಎಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವದನ್ನು ಈ ಹಿಂದೆಯೇ ವಿರೋಧಿಸಲಾಗಿತ್ತು. ಆದರೆ ಪಕ್ಷದ ಹಿರಿಯ ನಾಯಕರಾದ ದೇವೇಗೌಡ ಅವರು ಎರಡು ದಿನಗಳ ಒಳಗೆ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಲಾಗುವದು ಎಂದು ಜೀವಿಜಯ ಅವರಿಗೆ ಭರವಸೆ ನೀಡಿದ್ದರು. ಆದರೆ ಇದುವರೆಗೆ ಯಾವದೇ ಕ್ರಮ ಕೈಗೊಂಡಿಲ್ಲ.
ಮುಂದಿನ ಮೂರ್ನಾಲ್ಕು ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದರೆ, ದೇವೇಗೌಡರನ್ನು ಭೇಟಿಯಾಗಿ ಕಾರ್ಯಕರ್ತರ ಕೊನೆಯ ನಿರ್ಧಾರವನ್ನು ಪ್ರಕಟಿಸಲಿದ್ದೇವೆ. ಪಕ್ಷದ ಕಾರ್ಯಕರ್ತರ ನಿರ್ಧಾರಕ್ಕೆ ಮಾಜಿ ಸಚಿವ ಜೀವಿಜಯ ಅವರೂ ಸಹ ಬೆಂಬಲ ನೀಡಬೇಕಿದೆ ಎಂದು ಮುಖಂಡರು ಮನವಿ ಮಾಡಿದರು.
ಸಭೆಯಲ್ಲಿದ್ದ ಜೀವಿಜಯ ಮಾತನಾಡಿ, ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ ನಂತರ, ಅವರ ನಿರ್ಧಾರದ ಮೇಲೆ ಮುಂದಿನ ಕಾರ್ಯಯೋಜನೆ ಮಾಡಲಾಗುವದು. ಕುಶಾಲನಗರ ಅಥವಾ ಸೋಮವಾರಪೇಟೆಯಲ್ಲಿ ಕಾರ್ಯಕರ್ತರ ಸಭೆ ಕರೆದು ನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವದು ಎಂದರು.
ಸಭೆಯಲ್ಲಿ ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವಾ, ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್, ರಾಜ್ಯ ಉಪಾಧ್ಯಕ್ಷ ಮನೋಜ್ ಬೋಪಯ್ಯ, ರಾಜ್ಯ ಎಸ್.ಟಿ.ಘಟಕದ ಉಪಾಧ್ಯಕ್ಷ ರಾಜಾರಾವ್, ಜಿಲ್ಲಾ ಕಾರ್ಯಾಧ್ಯಕ್ಷ ಕಾರ್ಮಾಡು ಸುಬ್ಬಣ್ಣ, ಜಿಲ್ಲಾ ಕಾರ್ಯ ದರ್ಶಿ ಕೆ.ಆರ್.ಸುರೇಶ್, ಜಿ.ಪಂ. ಮಾಜಿ ಅಧ್ಯಕ್ಷೆ ಎಚ್.ಬಿ. ಜಯಮ್ಮ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಶಿವದಾಸ್ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.