ಕೊಚ್ಚಿ, ಏ. 4: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷರ ದಕ್ಷಿಣ ಭಾರತದ ಸ್ಪರ್ಧೆ ಕೊನೆಗೂ ಅಧಿಕೃತವಾಗಿದ್ದು, ಇಂದು ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಇವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಇದ್ದದ್ದು ವಿಶೇಷವಾಗಿತ್ತು. ರಾಹುಲ್ ಗಾಂಧಿ ವಯನಾಡಿನಲ್ಲಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆ ಕೇರಳದಲ್ಲಿ ರಾಜಕೀಯ ಕಾವು ಜೋರಾಗಿದೆ. ಇನ್ನು ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಕೇರಳ ಕಾಂಗ್ರೆಸ್ ಘಟಕ ಬೃಹತ್ ರ್ಯಾಲಿ ಮತ್ತು ರೋಡ್ ಶೋ ಹಮ್ಮಿಕೊಂಡಿತ್ತು. ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರೋಡ್ ಶೋ ಮೂಲಕ ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು. ಅಲ್ಲದೆ ವಯನಾಡ್ ಡಿಸಿ ಕಚೇರಿವರೆಗೂ ಸಾವಿರಾರು ಮಂದಿ ತೆರಳಿ ರಾಹುಲ್ ಗಾಂಧಿ ಅವರಿಗೆ ಬೆಂಬಲ ಘೋಷಣೆ ಮಾಡಿದರು.